ಕಾಳಗಿ ತಾಲೂಕಿನ ರಟಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಜ್ಞಾನದೇವ ಅವರನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಆಡಳಿತ ಆದೇಶ ಹೊರಡಿಸಿದೆ.
‘ಸಾರ್ವಜನಿಕರಿಂದ ಬಂದಿದ್ದ ದೂರುಗಳು ಮತ್ತು ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದರು. ಈ ವೇಳೆ ಆರೋಪಗಳಿಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕೆಲವು ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿದುಬಂದಿದೆ.
‘ಗ್ರಾಮ ಪಂಚಾಯಿತಿ ಆಡಳಿತ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಕರ್ತವ್ಯ ಪಾಲನೆಯಲ್ಲಿ ಲೋಪ ಹಾಗೂ ಸೇವಾ ನಿಯಮಗಳ ಉಲ್ಲಂಘನೆ ಕುರಿತು ಜ್ಞಾನದೇವ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ವಿಚಾರಣೆ ನಡೆಸಲು’ ನಿರ್ಧರಿಸಲಾಗಿದೆ.
‘ವಿಚಾರಣೆ ಪ್ರಕ್ರಿಯೆ ಮೇಲೆ ಯಾವುದೇ ಪರಿಣಾಮ ಬೀರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿದ್ದೀರಾ? ಯಾದಗಿರಿ | ಜೆಡಿಎಸ್ ಸಾಂಸ್ಕೃತಿಕ ವಿಭಾಗದ ಜಿಲ್ಲಾಧ್ಯಕ್ಷರಾಗಿ ಭೀಮಾಶಂಕರ ಯರಗೊಳ ನೇಮಕ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ ಅವರು ಈ ಸಂಬಂಧ ಅಮಾನತು ಆದೇಶ ಹೊರಡಿಸಿದ್ದು, ಅದು ತಕ್ಷಣದಿಂದಲೇ ಜಾರಿಗೆ ಬಂದಿದೆ.





