ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರನ್ನು ತಕ್ಷಣ ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಜಿಲ್ಲಾ ಕೋಲಿ-ಕಬ್ಬಲಿಗ ಸಮನ್ವಯ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ.
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮುಖಂಡ ಅವಣ್ಣ ಮ್ಯಾಕೇರಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸಚಿವ ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಸಚಿವರ ಪಟ್ಟಿಯಲ್ಲಿ ಹೆಸರು ಪ್ರಕಟವಾದ ಬಳಿಕ ಮಂಕಾಳ ವೈದ್ಯ ಹಾಗೂ ಗಾಯತ್ರಿ ಶಾಂತೇಗೌಡ ಅವರನ್ನು ಕೈಬಿಟ್ಟಿರುವುದು ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ಮಾಡಿದ ಅಪಮಾನ’ ಎಂದು ದೂರಿದರು.
‘ಕರ್ನಾಟಕದಲ್ಲಿ ಸುಮಾರು 92 ವಿಧಾನಸಭಾ ಕ್ಷೇತ್ರಗಳಲ್ಲಿ ಕೋಲಿ-ಕಬ್ಬಲಿಗ ಸಮುದಾಯ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಹಿಂದಿನ ಸರ್ಕಾರಗಳಲ್ಲಿ ಕೃಷ್ಣಮೂರ್ತಿ, ಮನೋರಾಮ ಮುದ್ದಿರಾಜು, ಬಾಬುರಾವ ಚಿಂಚನಸೂರ, ಡಿ.ಟಿ. ಜಯಕುಮಾರ, ದೇವಿಂದ್ರಪ್ಪ ಸೇರಿದಂತೆ ಹಲವು ನಾಯಕರಿಗೆ ಸಚಿವ ಸ್ಥಾನ ದೊರೆತಿತ್ತು. ಆದರೆ ಈ ಬಾರಿ ಸಮುದಾಯದ ಪ್ರತಿನಿಧಿಯಾಗಿರುವ ಮಂಕಾಳ ವೈದ್ಯ ಅವರಿಗೆ ಅವಕಾಶ ನಿರಾಕರಿಸಿರುವುದು ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ’ ಎಂದು ಹೇಳಿದರು.
‘ಈ ಹಿಂದೆ ಬಾಬುರಾವ ಚಿಂಚನಸೂರ ಅವರಿಗೂ ಸಚಿವ ಸ್ಥಾನದಿಂದ ವಂಚನೆ ಮಾಡಲಾಗಿತ್ತು. ಈಗ ಮತ್ತೊಮ್ಮೆ ಕೋಲಿ-ಕಬ್ಬಲಿಗ ಸಮುದಾಯವನ್ನು ಕಡೆಗಣಿಸಿರುವುದು ಸರ್ಕಾರದ ಧೋರಣೆಯನ್ನು ಬಯಲಿಗೆಳೆಯುತ್ತದೆ’ ಎಂದು ಅವರು ಆರೋಪಿಸಿದರು.
‘ಸಮಿತಿಯ ಮತ್ತೊಬ್ಬ ಮುಖಂಡ ಬಸವರಾಜ ಬೂದಿಹಾಳ ಮಾತನಾಡಿ, ಕೋಲಿ ಸಮಾಜವು ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಹೊಂದಿದ್ದು, ಮಂಗಳೂರು, ಉಡುಪಿ ಹಾಗೂ ಕಾರವಾರ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದೆ. ಇಷ್ಟೊಂದು ದೊಡ್ಡ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡದಿರುವುದು ಬೇಸರದ ಸಂಗತಿ’ ಎಂದರು.
‘ಮಹಿಳಾ ಸಬಲೀಕರಣದ ಬಗ್ಗೆ ಸರ್ಕಾರ ದೊಡ್ಡ ಮಟ್ಟದಲ್ಲಿ ಮಾತನಾಡುತ್ತಿದ್ದರೂ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಮರ್ಪಕ ಸ್ಥಾನ ನೀಡದಿರುವುದು ಮಹಿಳಾ ರಾಜಕೀಯ ಪ್ರಾತಿನಿಧ್ಯಕ್ಕೆ ಮಾಡಿದ ಅಪಮಾನವಾಗಿದೆ. ಹಿಂದುಳಿದ ಕುರುಬ ಸಮುದಾಯದ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡದೇ ಕೈಬಿಟ್ಟಿರುವುದನ್ನು ಸಮಿತಿ ತೀವ್ರವಾಗಿ ಖಂಡಿಸುತ್ತದೆ’ ಎಂದು ಹೇಳಿದರು.
‘ಕೋಲಿ, ಕಬ್ಬಲಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯಲ್ಲಿಯೂ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.
‘ಮಂಕಾಳ ವೈದ್ಯ ಹಾಗೂ ಗಾಯತ್ರಿ ಶಾಂತೇಗೌಡ ಅವರನ್ನು ಕೂಡಲೇ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಜಿಲ್ಲಾ ಕೋಲಿ,ಕಬ್ಬಲಿಗ ಸಮನ್ವಯ ಸಮಿತಿ ಎಚ್ಚರಿಕೆ ನೀಡಿತು.
ಇದನ್ನು ಓದಿದ್ದೀರಾ? ಕಲಬುರಗಿ | ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯ, ಸಿಬ್ಬಂದಿ ಹಾಜರಾತಿ ಸುಧಾರಣೆಗೆ ಒತ್ತಾಯಿಸಿ ಮನವಿ
ಸುದ್ದಿಗೋಷ್ಠಿಯಲ್ಲಿ ಪೇಮ ಕೋಳಿ, ಚಂದ್ರಕಾಂತ ಕಿರಸವಾಳಗಿ, ಬಸವರಾಜ ಸಪಣ್ಣಗೋಳ, ಶರಣಪ್ಪ ಹಾಗೂ ಗಿರೀಶ್ ಭಜಂತ್ರಿ ಉಪಸ್ಥಿತರಿದ್ದರು.





