ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು ಅಧಿಕಾರದಲ್ಲಿದ್ದಾಗ ಜನರಿಗೆ ಖರ್ಚು ಮಾಡಬೇಕಿದ್ದ ತೆರಿಗೆ ಹಣವನ್ನು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದರು. ಆದರೆ ನಾವು ಜನರ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಮತ್ತೆ ಅವರಿಗೆ ನೀಡುತ್ತಿದ್ದು, ಜನರ ಹಣವನ್ನು ಸದ್ಭಳಕೆ ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಜಿಲ್ಲೆಯ ಜೇವರ್ಗಿ ಹೊರವಲಯದಲ್ಲಿರುವ ಧರ್ಮ್ ಸಿಂಗ್ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡಿದರು.
“ಆರ್ಥಿಕ ಅಸಮಾನತೆ, ನಿರುದ್ಯೋಗ, ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಕಷ್ಟ ಅರಿತುಕೊಂಡ ನಮ್ಮ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಆರ್ಥಿಕ ಸಬಲತೆಗೆ ಹಾಗೂ ಅವರು ನೆಮ್ಮದಿಯ ಜೀವನ ನಡೆಸಲು ಬೇಕಾದ ಅಗತ್ಯ ಕ್ರಮ ಕೈಗೊಂಡಿದೆ” ಎಂದರು.
“ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳ ಹಣವನ್ನು ಮಹಿಳೆಯರು ಸಂಸಾರದ ವೆಚ್ಚಕ್ಕೆ, ಪೌಷ್ಠಿಕಾಂಶ ಆಹಾರ ಬಳಸಲು ಹಾಗೂ ಮಕ್ಕಳ ಶಾಲೆ ಟ್ಯೂಷನ್ ಫೀಸ್ಗೆ ಬಳಸುತ್ತಿದ್ದಾರೆ. ಹೀಗಿರುವಾಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಹಿಳೆಯರು ದಾರಿ ತಪ್ಪಿದ್ದಾರೆಂದು ಹೇಳಿ ಅವರಿಗೆ ಅವಮಾನ ಮಾಡಿದ್ದಾರೆ. ಅವರಿಗೆ ವಾಸ್ತವದ ಅರಿವಿಲ್ಲ” ಎಂದು ಟೀಕಿಸಿದರು.
“ಬಿಜೆಪಿ ಅಧಿಕಾರದ ಹತ್ತು ವರ್ಷಗಳ ಅವಧಿಯಲ್ಲಿ ದಿನಬಳಕೆ ವಸ್ತುಗಳು, ಪೆಟ್ರೋಲ್-ಡೀಸೆಲ್, ರಸಗೊಬ್ಬರ ಹಾಗೂ ಇತ್ಯಾದಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದೇನಾ ಮೋದಿಯವರ ಅಚ್ಛೇದಿನ್? ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಅವರು ನೀಡಿರುವ ಯಾವ ಭರವಸೆ ಈಡೇರಿಸಿದ್ದಾರೆ? ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮನಮೋಹನ್ ಸಿಂಗ್ ₹72,000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಣದ ಕೊರತೆ ಕಾರಣ ಹೇಳಿ ಬಂಡವಾಳಶಾಯಿಗಳ ₹12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿ ಸಾಧ್ಯವೆಂದು ಜನರನ್ನು ಯಾಮಾರಿಸಿದ ಬಿಜೆಪಿ ಜನರ ಅಭಿವೃದ್ಧಿಗಾಗಿ ಯಾವುದಾದರೊಂದು ಯೋಜನೆಯನ್ನು ಜಾರಿಗೊಳಿಸಿದ್ದರೆ ತೋರಿಸಲಿ” ಎಂದು ವಾಗ್ದಾಳಿ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ
“ನಿಮ್ಮ ಅಮೂಲ್ಯವಾದ ಮತವು ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸಲಿದೆ. ಆದ್ದರಿಂದ ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

Yes your right sir 👏