ಚಿಂಚೋಳಿ ತಾಲೂಕಿನ ಸುಲೇಪೇಟೆ ಹೋಬಳಿ ವ್ಯಾಪ್ತಿಯ ಯಾಕಾಪೂರ ಗ್ರಾಮದ ಸರ್ಕಾರಿ ಗೋಮಾಳ ಜಮೀನಿನಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ವಿರುದ್ಧ ದೂರು ನೀಡಿದ ಬಳಿಕ ದೂರುದಾರರ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ದೂರುದಾರರಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಭಾರತ ಮುಕ್ತಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗೀರಿ ಒತ್ತಾಯಿಸಿದರು.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಾಕಾಪೂರ ಗ್ರಾಮದ ಸರ್ವೇ ನಂ.74ರ 18 ಎಕರೆ ಹಾಗೂ ಸರ್ವೇ ನಂ.76ರ 15 ಎಕರೆ ಸೇರಿ ಒಟ್ಟು 33 ಎಕರೆ ಸರ್ಕಾರಿ ಗೋಮಾಳ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ಪ್ರಭಾವಿಗಳು ಹಾಗೂ ತೆಲಂಗಾಣದ ಕೆಲವರು ಅಕ್ರಮವಾಗಿ ಸೌಳು ಮಣ್ಣು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ರಾಜಸ್ವ ನಷ್ಟವಾಗಿರುವುದಲ್ಲದೆ, ಗೋಮಾಳ ಪ್ರದೇಶದಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿ ಜಾನುವಾರುಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿವೆ’ ಎಂದು ಹೇಳಿದರು.
‘ಈ ಕುರಿತು ಜುಲೈ 18ರಂದು ಚಿಂಚೋಳಿ ತಹಸೀಲ್ದಾರರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜುಲೈ 20ರಂದು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದ ಅದೇ ರಾತ್ರಿ ಕೆಲವರು ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೂರು ಹಿಂಪಡೆಯುವಂತೆ ಒತ್ತಡ ಹೇರಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಈ ಘಟನೆಯಿಂದ ಕುಟುಂಬದ ಸದಸ್ಯರು, ವಿಶೇಷವಾಗಿ ವಯೋವೃದ್ಧ ತಂದೆ-ತಾಯಿ ಮಾನಸಿಕ ಆಘಾತಕ್ಕೊಳಗಾಗಿದ್ದಾರೆ’ ಎಂದರು.
‘ಸುಲೇಪೇಟೆ, ಯಾಕಾಪೂರ, ಕೋರವಿ, ಪೆಂಚನಪಳ್ಳಿ, ಕುಡ್ಡಳ್ಳಿ, ಕುಪನೂರ, ಕೆರೋಳ್ಳಿ ಹಾಗೂ ಭಂಟನಳ್ಳಿ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಸೌಳು ಗಣಿಗಾರಿಕೆ ಕುರಿತು ವಿವಿಧ ಸಂಘಟನೆಗಳು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಲೋಕಾಯುಕ್ತ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ’ ಎಂದು ದೂರಿದರು.
‘ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯ ಪ್ರಕಾರ ಸುಲೇಪೇಟೆ ಗ್ರಾಮದಲ್ಲಿ ಕೇವಲ ಇಬ್ಬರಿಗೆ ಮಾತ್ರ ಸೌಳು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಆದರೆ ಅದರ ಹೊರತಾಗಿಯೂ ಅನೇಕ ಕಡೆಗಳಲ್ಲಿ ಅಕ್ರಮ ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವಾಗಿದೆ’ ಎಂದು ಆರೋಪಿಸಿದರು.
‘ಅತಿಭಾರ ಹೊತ್ತ ಟಿಪ್ಪರ್ಗಳು ತಾಡಪತ್ರಿ ಮುಚ್ಚದೆ ಅತಿವೇಗದಲ್ಲಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗಿದೆ. ದ್ವಿಚಕ್ರ ವಾಹನ ಸವಾರರು, ರೈತರು ಹಾಗೂ ಶಾಲಾ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕುತ್ತಿದ್ದು, ಇತ್ತೀಚೆಗೆ ರಟಕಲ್ ಸಮೀಪ ವಿದ್ಯಾರ್ಥಿಯೊಬ್ಬನಿಗೆ ಟಿಪ್ಪರ್ನಿಂದ ಸೌಳು ಬಿದ್ದು ಗಾಯಗೊಂಡ ಘಟನೆ ನಡೆದಿರುವುದನ್ನು’ ಅವರು ಉಲ್ಲೇಖಿಸಿದರು.
‘ಅಕ್ರಮ ಸೌಳು ಗಣಿಗಾರಿಕೆಯನ್ನು ತಕ್ಷಣ ತಡೆದು, ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಬೇಕು. ಸರ್ಕಾರಿ ಗೋಮಾಳ ಜಮೀನುಗಳಿಗೆ ಬೇಲಿ ನಿರ್ಮಿಸಿ ಅತಿಕ್ರಮಣ ಮತ್ತು ಅಕ್ರಮ ಗಣಿಗಾರಿಕೆಗೆ ಶಾಶ್ವತ ತಡೆ ಹಾಕಬೇಕು. ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ದೂರುದಾರರಿಗೆ ಪೊಲೀಸ್ ಭದ್ರತೆ ಒದಗಿಸಬೇಕು’ ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗ, ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ: ಕೋಲಿ, ಕಬ್ಬಲಿಗ ಸಮಿತಿ ಆರೋಪ
ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಚೇತನ ಯಾಕಾಪೂರ, ಸಾರಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಪಾಸ್ಟರ್ ಹಾಗೂ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಮೋಹನ ಐನಾಪೂರ ಉಪಸ್ಥಿತರಿದ್ದರು.





