ನಗರದ ಹೊರವಲಯದ ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದ ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಯವರೆಗೆ ಇರುವ ರಸ್ತೆ ಬದಿಯ ದಾರಿದೀಪಗಳನ್ನು ತುರ್ತಾಗಿ ದುರಸ್ತಿಪಡಿಸಿ ಮರು ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಶನಿವಾರ ಪಾಲಿಕೆ ಆಯುಕ್ತರು ಮತ್ತು ಪೊಲೀಸ್ ಇಲಾಖೆಯ ಆಯುಕ್ತರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿ ಮುಖಂಡರು ಈ ಮಾರ್ಗದಲ್ಲಿ ಸುಮಾರು 32 ದಾರಿದೀಪ ಕಂಬಗಳಿದ್ದು, ಬಹುತೇಕ ದೀಪಗಳು ಹಲವು ದಿನಗಳಿಂದ ಬೆಳಗುತ್ತಿಲ್ಲ. ಪರಿಣಾಮ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಖಣದಾಳ, ಇಟಿಗಾ, ಸಿರನೂರು, ಪಣೆಗಾಂವ, ಸೀತನೂರು, ನಂದಿಕೂರು ಹಾಗೂ ಕೋಟನೂರ (ಡಿ) ಸೇರಿದಂತೆ ಹಲವು ಗ್ರಾಮಗಳ ಸಾವಿರಾರು ಜನರು ಪ್ರತಿದಿನ ಇದೇ ರಸ್ತೆಯನ್ನು ಬಳಸುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಬಸ್ಗಾಗಿ ಕಾಯುವ ಪ್ರಯಾಣಿಕರು ಕತ್ತಲೆಯಲ್ಲೇ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರಲ್ಲಿ ಆತಂಕ ಹೆಚ್ಚಾಗಿದೆ ಎಂದು ದೂರಲಾಗಿದೆ.
ದಾರಿದೀಪಗಳು ಕಾರ್ಯನಿರ್ವಹಿಸದ ಕಾರಣ ಕಳ್ಳತನ, ದರೋಡೆ ಹಾಗೂ ಸಮಾಜಘಾತುಕ ಚಟುವಟಿಕೆಗಳಿಗೆ ಅವಕಾಶವಾಗುವ ಸಾಧ್ಯತೆ ಇದೆ. ಅಲ್ಲದೆ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ತೆರಳುವುದು ಸೇರಿದಂತೆ ದೈನಂದಿನ ಸಂಚಾರಕ್ಕೂ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದವರೆಗೆ ಇರುವ ಎಲ್ಲಾ ದಾರಿದೀಪಗಳನ್ನು ಕೂಡಲೇ ದುರಸ್ತಿಪಡಿಸಿ ವಿದ್ಯುತ್ ವ್ಯವಸ್ಥೆಯನ್ನು ಪುನರಾರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | 55 ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ನಿರ್ಲಕ್ಷ್ಯಕ್ಕೆ ಇಬ್ಬರು ಅಧಿಕಾರಿಗಳ ಅಮಾನತು
ಬೇಡಿಕೆಯನ್ನು ಶೀಘ್ರವಾಗಿ ಈಡೇರಿಸದಿದ್ದರೆ ಸಾರ್ವಜನಿಕರ ಹಿತದೃಷ್ಟಿಯಿಂದ ರಾಮಮಂದಿರ ವೃತ್ತದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ಹೋರಾಟ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪವನಕುಮಾರ್ ವಳಕೇರಿ, ರವೀಂದ್ರ ವಿಭೂತಿ, ಸಂಗಮೇಶ ನಾಗನಳ್ಳಿ, ಮಲ್ಲಿನಾಥ ನಾಗನಳ್ಳಿ, ಲೋಹಿತ್ ವಿಶ್ವಕರ್ಮ, ವೈಭವ ಬಬಲಾದ, ಹರ್ಷಾದ ಖಾನ್, ಚಂದ್ರಕಾಂತ, ಶರಣಬಸಪ್ಪ ಹೂಗರ್, ವೀರಣ್ಣಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಇದ್ದರು.





