ಕಲಬುರಗಿ ತಾಲ್ಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದೆ.
2024ರ ಜನವರಿ 22ರಂದು ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗುತ್ತಿದ್ದ. ಈ ಸಂದರ್ಭದಲ್ಲಿ ಮಹಿಳೆ ಚೀರಾಡಿದ್ದರಿಂದ ಆಕೆಯ ಸೋದರತ್ತೆ ಬಂದು ನೋಡಿದಾಗ ಹೊನ್ನಪ್ಪ ಪರಾರಿಯಾಗಿದ್ದ. ನಂತರ ಆಕೆ ಮಹಿಳೆಯ ಸಹೋದರ ಮತ್ತು ತಂದೆಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ಬಳಿಕ ಅವರು ಅಪರಾಧಿಯನ್ನು ಹುಡುಕಿ ಪೊಲೀಸರಿಗೆ ಒಪ್ಪಿಸಿದ್ದರು.
ಫರಹತಾಬಾದ್ ಠಾಣೆಯ ತನಿಖಾಧಿಕಾರಿಗಳಾದ ಮಲ್ಲಿಕಾರ್ಜುನ ಇಕ್ಕಳಕಿ, ಬಾಲಚಂದ್ರ ಲಕ್ಕಂ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಹ್ಮದ್ ಮುಜೀರ್ ಉಲ್ಲಾ ಸಿ.ಜಿ. ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
ಸರ್ಕಾರಿ ಅಭಿಯೋಜಕ ಹಯ್ಯಾಳಪ್ಪ ಎನ್. ಬಳಬಟ್ಟಿ ವಾದ ಮಂಡಿಸಿದ್ದರು.