ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಸರ್ಕಾರಿ ಪದವಿ ಮಹಾವಿದ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
“ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ಸೇರಿದ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಮಾತನಾಡಿ, “ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ(ಸ್ವಾಯತ್ತ) ಐದು ಸಾವಿರಕ್ಕೂ ಅಧಿಕ ಮಂದಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಈ ಪದವಿ ಕಾಲೇಜಿಗೆ ಸೇರಿದ ಮೂರು ಎಕರೆ ಏಳು ಗುಂಟೆ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ ಕೊಡಬೇಕೆಂದು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯವಾಗಿದೆ” ಎಂದರು.
“ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ತೊಂದರೆ ಉಂಟುಮಾಡುತ್ತದೆ. ಸರ್ಕಾರ ಉನ್ನತ ಶಿಕ್ಷಣವನ್ನು ಬಲಪಡಿಸಿ ವಿದ್ಯಾರ್ಥಿಗಳಲ್ಲಿ ಆದರ್ಶ ಮೌಲ್ಯಗಳನ್ನು ತುಂಬಬೇಕು. ಅದನ್ನು ಬಿಟ್ಟು ಸರ್ಕಾರಗಳು ಶಿಕ್ಷಣಕ್ಕೆ ಸಂಬಂಧಪಟ್ಟ ಭೂಮಿಯನ್ನು ಶಿಕ್ಷಣೇತರ ಕೆಲಸಕ್ಕೆ ಬಳಸುತ್ತಿರುವುದು ಅತ್ಯಂತ ಆಘಾತಕಾರಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ಮಾತನಾಡಿ, “ಶಿಕ್ಷಣಕ್ಕೆ ಸಂಬಂಧಿಸಿದ ಜಾಗವನ್ನು ಯಾವುದೇ ಸಮುದಾಯಗಳಿಗೆ ಅಥವಾ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು, ಕಾಲೇಜು ಭೂಮಿ ಕಾಲೇಜಿಗೆ ಬಳಸಿಕೊಳ್ಳಬೇಕು. ಸಚಿವ ಸಂಪುಟದ ಈ ನಿರ್ಧಾರ ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ತರುತ್ತದೆ. ಕರ್ನಾಟಕ ರಾಜ್ಯ ಸರ್ಕಾರವು ಈ ಕೂಡಲೇ ಈ ವಿಷಯದ ಕುರಿತು ಗಮನಹರಿಸಬೇಕು ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಇರುವ ಜಾಗವನ್ನು ಯಾವುದೇ ಸಮುದಾಯಕ್ಕೆ ಕೊಡಬಾರದು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಮನಗರ | ಕೆಪಿಟಿಸಿಎಲ್ ಸಿಬ್ಬಂದಿಗಳಿಂದಲೇ ವಿದ್ಯುತ್ ಕಂಬ ಕಳ್ಳತನ: ಸ್ವಾಮಿ ಹೆಚ್ ಎಸ್ ಆರೋಪ
ಈ ಸಂದರ್ಭದಲ್ಲಿ ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್ ಎಚ್, ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದಾರ್ಥ್ ತಿಪ್ಪನೋರ, ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಸದಸ್ಯರಾದ ಅಭಿಷೇಕ್, ಕಾಶಿನಾಥ್, ಭೀಮಾಶಂಕರ, ಸಂತೋಷಿ, ಯುವರಾಜ, ರಾಹುಲ್, ಸ್ಪೂರ್ತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.
