ನಗರದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು, ಎಲ್ಆ್ಯಂಡ್ಟಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಗತ್ ವೃತ್ತದಿಂದ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮಹಾನಗರ ಪಾಲಿಕೆ ಕಚೇರಿವರೆಗೆ ತೆರಳಿ, ಪಾಲಿಕೆ ಆಯುಕ್ತರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಎಸ್ಕೆಎಂ ಹಾಗೂ ಎಐಕೆಎಸ್ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, “ಭೀಕರ ಬರಗಾಲದ ಪರಿಣಾಮ ನಗರದಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಬಾವಿ ಮತ್ತು ಬೋರ್ವೆಲ್ಗಳು ಬತ್ತುತ್ತಿವೆ. ಹಲವು ವಾರ್ಡ್ಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದೆ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳು ಖಾಸಗಿ ಟ್ಯಾಂಕರ್ಗಳಿಂದ ನೀರು ಖರೀದಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ. ನೀರಿನ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದಾರೆ,” ಎಂದು ಆರೋಪಿಸಿದರು.
“ನಗರದ ಕುಡಿಯುವ ನೀರಿನ ಯೋಜನೆ ನಿರ್ವಹಿಸುತ್ತಿರುವ ಎಲ್ಆ್ಯಂಡ್ಟಿ ಸಂಸ್ಥೆ ಹಲವು ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ. ಕಾಮಗಾರಿ ಹೆಸರಿನಲ್ಲಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು, ವಯೋವೃದ್ಧರು ಹಾಗೂ ವಾಹನ ಸವಾರರು ಅಪಾಯ ಎದುರಿಸುತ್ತಿದ್ದು, ಅಪಘಾತಗಳೂ ಹೆಚ್ಚಾಗಿವೆ. ನಗರದ ಹಲವು ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ದುರ್ವಾಸನೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ,” ಎಂದು ಹೇಳಿದರು.
“ನಗರದಲ್ಲಿ ಮನೆಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವುದು, ಎಲ್ಆ್ಯಂಡ್ಟಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಜರುಗಿಸುವುದು, ಸಾರ್ವಜನಿಕ ಶೌಚಾಲಯ ನಿರ್ಮಾಣ, ಒಳಚರಂಡಿ ದುರಸ್ತಿ, ರಸ್ತೆ ಅಗಲೀಕರಣ ಹಾಗೂ ಬರಪೀಡಿತರಿಗೆ ಸೂಕ್ತ ಪರಿಹಾರ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಯಾದಗಿರಿ | ಮಕ್ಕಳ ಹಕ್ಕು, ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ
ಪ್ರತಿಭಟನೆಯಲ್ಲಿ ಭೀಮಾಶಂಕರ ಮಾಡಿಯಾಳ, ನಾಗೇಂದ್ರಪ್ಪ ಥಂಬೆ, ನಾಗಯ್ಯ ಸ್ವಾಮಿ, ಕರೆಪ್ಪ ಕರಗೊಂಡ, ದೇವಾನಂದ ಬಿರಾದಾರ್, ಸಿದ್ದು ಎಸ್.ಎಲ್., ಮೌಲಾ ಮುಲ್ಲಾ, ಸಾಜಿದ್ ಅಹ್ಮದ್ ಸೇರಿದಂತೆ ಎಸ್ಕೆಎಂ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.





