ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಚಿತ್ತಾಪುರ ಮತ ಕ್ಷೇತ್ರದ ಭಾಗೋಡಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಮಾತನಾಡಿ, “ಕಳೆದ ಚುನಾವಣೆ ಸಂದರ್ಭದಲ್ಲಿ ಕೋಲಿ, ಕಬ್ಬಲಿಗ ಹಾಗೂ ಕುರುಬ ಸಮುದಾಯವನ್ನು ಎಸ್ಟಿ ಸೇರಿಸುತ್ತೇವೆ, ಬೇಕಾದರೆ ರಕ್ತದಲ್ಲಿ ಬರೆದುಕೊಡುವಾಗಿ ಎಮ್ಎಲ್ಸಿ ರವಿಕುಮಾರ್ ಹೇಳಿದ್ದರು. ಆದರೆ ಈಗ ಅವರ ಮಾತು ಉಳಿಸಿಕೊಂಡಿಲ್ಲ” ಎಂದರು.
“ಬಿಜೆಪಿ ಅಧಿಕಾರದಲ್ಲಿದ್ದಾಗ ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿತ್ತು. ನಮ್ಮ ಸರ್ಕಾರ ಬಂದಾಗ ಬೇಡಿಕೆಯ ಅಕ್ಕಿ ಸರಬರಾಜು ಮಾಡಲು ಕೂಡಾ ನಿರಾಕರಿಸಿತ್ತು. ದುರಂತ ಎಂದರೆ ನಮಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರ ವಿದೇಶಕ್ಕೆ ರಫ್ತು ಮಾಡಿತು” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.
“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರು ನೆಮ್ಮದಿಯ ಜೀವನ ನಡೆಸುತ್ತಾರೆ. ಕಾರಣ ನಮ್ಮ ಜನಪರ ಯೋಜನೆಗಳು, ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲತೆಗೆ ಸಹಕಾರಿಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ. ದೇವಾಲಯಗಳ ಹುಂಡಿಗಳು ತುಂಬುತ್ತಿವೆ. ಇದನ್ನು ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಪ್ರಶಂಸಿದ್ದಾರೆ. ಇದು ಬಿಜೆಪಿಗೆ ಸಹಿಸಲಾಗುತ್ತಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ
“ಕೇಂದ್ರದಲ್ಲಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ಎಲ್ಲರೂ ಕಾಂಗ್ರೆಸ್ಗೆ ಮತ ನೀಡಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ ದೊಡ್ಡಮನಿ ಹಾಗೂ ನಾನು ಸೇರಿ ಚಿತ್ತಾಪುರ ಕ್ಷೇತ್ರ ಅಭಿವೃದ್ದಿ ಮಾಡುತ್ತೇವೆ. ನೀವು ಆಶೀರ್ವದಿಸಿದರೆ ಸಾವಿರಾರು ಕೋಟಿ ಅನುದಾನ ತರುತ್ತೇವೆ” ಎಂದು ಭರವಸೆ ನೀಡಿದರು.