ಬರಪೀಡಿತ ಎಲ್ಲ ರೈತರಿಗೆ ತಾರತಮ್ಯವಿಲ್ಲದೆ ಬೆಳೆವಿಮೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್ಎಸ್) ಕಲಬುರಗಿ ಜಿಲ್ಲಾ ಘಟಕವು ರಾಜ್ಯ ಸರ್ಕಾರ ಮತ್ತು ಬೆಳೆವಿಮಾ ಕಂಪನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.
ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, “ರಾಜ್ಯದಲ್ಲಿ ರೈತರು ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸರ್ಕಾರ ಸಚಿವ ಸಂಪುಟ ರಚನೆ, ಅಧಿಕಾರದ ರಾಜಕಾರಣದಲ್ಲಿ ತೊಡಗಿದೆ. ರೈತರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ರಾಜಕೀಯ ಬೆಳವಣಿಗೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.
“ಜಿಲ್ಲೆಯಲ್ಲಿ ಉದ್ದು, ಸೋಯಾಬಿನ್, ಎಳ್ಳು ಸೇರಿದಂತೆ ವಿವಿಧ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಲದ ಹೊರೆಯಿಂದ ನಲುಗುತ್ತಿರುವ ರೈತರಿಗೆ ಬೆಳೆ ವಿಮೆ ಪರಿಹಾರವೂ ಸಮರ್ಪಕವಾಗಿ ದೊರೆಯುತ್ತಿಲ್ಲ. ವಿಮಾ ಕಂಪನಿಗಳು ಮತ್ತು ಸರ್ಕಾರ ತಾರತಮ್ಯದಿಂದ ನಡೆದುಕೊಂಡು ಅನೇಕ ರೈತರನ್ನು ವಿಮೆ ಹಣದಿಂದ ವಂಚಿಸಿವೆ” ಎಂದು ಅವರು ದೂರಿದರು.
ಈ ಸುದ್ದಿ ಓದಿದ್ದೀರಾ? ಗದಗ | ಎಚ್ ಕೆ ಪಾಟೀಲ್ಗೆ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಸದಸ್ಯರ ರಾಜೀನಾಮೆ
“ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಬೆಳೆವಿಮಾ ಕಂಪನಿಗಳು ಕೂಡಲೇ ಮಧ್ಯಪ್ರವೇಶಿಸಿ ಎಲ್ಲ ಅರ್ಹ ರೈತರಿಗೆ ಯಾವುದೇ ತಾರತಮ್ಯವಿಲ್ಲದೆ ಬೆಳೆವಿಮೆ ಪರಿಹಾರವನ್ನು ಬಿಡುಗಡೆ ಮಾಡಬೇಕು. ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಪರವಾಗಿ ಒತ್ತಾಯಿಸಿದರು.





