ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರು ಮಾರ್ಚ್ 2 ಭಾನುವಾರದಂದು ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ನಂತರ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಇಂದು ಉಡುಪಿ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಕಾಂಗ್ರೆಸ್ ಭವನದಿಂದ ಮಧ್ಯಾಹ್ನ ವಾಹನ ಜಾಥ ಹೊರಟು ಸಂಜೆ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಡಿಕೆಶಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ ಗಳ, 34 ಗ್ರಾಮೀಣ ಕಾಂಗ್ರೆಸ್ ಗಳ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ವೇದಿಕೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಕುಟುಂಬ ಒಂದಾಗಿ ಸಂಭ್ರಮಿಸಲಿದೆ ಎಂದು ಹೇಳಿದರು.
ಈಗಾಗಲೇ ಉಚಿತ ಗ್ಯಾರಂಟಿ ಯೋಜನೆಯ ಮೂಲಕ ಜನಮನಗೆದ್ದ ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಜನ ಕೊಂಡಾಡುತ್ತಿದ್ದು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ, ಉಚಿತ ಕರೆಂಟ್ ಮೊದಲಾದ ಜನಪದ ಯೋಜನೆಗಳು ಮಹಿಳೆಯರ ಮನ ಗೆದ್ದಿದೆ. ಆದ್ದರಿಂದ ಬೃಹತ್ ಸಂಖ್ಯೆಯ ಮಹಿಳೆಯರು ಸೇರಿದಂತೆ ಸಹಸ್ರ ಸಂಖ್ಯೆಯ ಜನ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಅದರ ಜೊತೆ ಜೊತೆಗೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ನ ಹಿರಿಯ ನಾಯಕರಾದ ಡಾ. ವೀರಪ್ಪ ಮೊಯ್ಲಿ ಅವರು ಶಾಸಕತ್ವವನ್ನು ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಲ್ಲದೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ನಗರ ಸಭಾ ಸದಸ್ಯ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಉಪಸ್ಥಿತರಿದ್ದರು.
