ಕಾರವಾರ: ತಾಲ್ಲೂಕಿನ ಕಡವಾಡ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವಂತೆ ಗ್ರಾಮಸ್ಥರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಹಗಲು-ರಾತ್ರಿ ಎನ್ನದೆ ವಿದ್ಯುತ್ ಕಡಿತವಾಗುತ್ತಿರುವುದರಿಂದ ಮನೆಗಳು ಹಾಗೂ ವ್ಯಾಪಾರಸ್ಥರು ಸಮಸ್ಯೆ ಎದುರಿಸುವಂತಾಗಿದೆ. ಗೌರಿ-ಗಣೇಶ ಹಬ್ಬದ ದಿನಗಳಲ್ಲಿಯೂ ವಿದ್ಯುತ್ ವ್ಯತ್ಯಯ ಮುಂದುವರಿದಿದ್ದು, ಫ್ರೀಜ್ಗಳಲ್ಲಿ ಇಡಲಾಗಿದ್ದ ಹಾಲು, ತರಕಾರಿ ಸೇರಿದಂತೆ ಹಲವು ವಸ್ತುಗಳು ಹಾಳಾಗುತ್ತಿವೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕುಮಟಾ | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು: ಮತ್ತೊಬ್ಬರಿಗೆ ಗಾಯ
ಕಡವಾಡದ ಭೋವಿವಾಡ, ಗೌಡಕೇರಿ, ಶಾಂಬಾವಾಡಾ, ಹಳೇಕೋಟ, ಕುಂಬಾರವಾಡಾ ಹಾಗೂ ಗುನಗಿವಾಡಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳು ಕೆಳಮಟ್ಟಕ್ಕೆ ಇಳಿದಿವೆ. ರಸ್ತೆ ಬದಿ ಹಾಗೂ ಶಾಲೆಯ ಸಮೀಪವೂ ತಂತಿಗಳು ಅಪಾಯಕಾರಿ ರೀತಿಯಲ್ಲಿ ವಾಲಿಕೊಂಡಿದ್ದು, ಅವುಗಳನ್ನು ಕೂಡಲೇ ಸರಿಪಡಿಸಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಿಶೋರ ಕಡವಾಡಕರ ಒತ್ತಾಯಿಸಿದರು.
ಗ್ರಾಮದಲ್ಲಿರುವ ವಿವಿಧ ವಿದ್ಯುತ್ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆನಂದು ಆರ್. ನಾಯ್ಕ ಅವರು ಹೆಸ್ಕಾಂ ಅಧಿಕಾರಿಗಳ ಗಮನ ಸೆಳೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹುತಾತ್ಮ ವೀರಯೋಧ ವಿನೋದ ನಾಯ್ಕ ಅವರ ತಂದೆ ಮಹಾದೇವ ಡಿ. ನಾಯ್ಕ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ, ಗ್ರಾಮ ಪಂಚಾಯಿತಿ ಸದಸ್ಯ ಕಿಶೋರ ಕಡವಾಡಕರ, ಮಾಜಿ ಅಧ್ಯಕ್ಷ ಆನಂದು ಆರ್. ನಾಯ್ಕ ಹಾಗೂ ಪ್ರದೀಪ ಕಡವಾಡಕರ ಉಪಸ್ಥಿತರಿದ್ದರು.




