ಕಾರವಾರ: ನಗರದ ಕೆಎಚ್ಬಿ ಬಡಾವಣೆಯಲ್ಲಿ ಪೆಂಡಾಲ್ ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕೆಎಚ್ಬಿ ಬಡಾವಣೆಯ ನಿವಾಸವೊಂದರಲ್ಲಿ ನಡೆದ ಕಾರ್ಯಕ್ರಮಕ್ಕಾಗಿ ಅಳವಡಿಸಲಾಗಿದ್ದ ಪೆಂಡಾಲ್ ಹಾಗೂ ಮೇಲ್ಛಾವಣಿಯ ತಗಡಿನ ಶೀಟುಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಭರತ್ ಗೌಡ ಅವರು ತಗಡಿನ ಶೀಟುಗಳನ್ನು ಕೆಳಗಿಳಿಸುವ ಕಾರ್ಯದಲ್ಲಿ ನಿರತರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ
ಅದೇ ಸಂದರ್ಭದಲ್ಲಿ ತಗಡಿನ ಶೀಟು ಸಮೀಪದಲ್ಲಿದ್ದ ವಿದ್ಯುತ್ ತಂತಿಗೆ ಸ್ಪರ್ಶಗೊಂಡ ಪರಿಣಾಮ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಭರತ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.




