ಕಾರವಾರ: ರಾಜ್ಯದಲ್ಲಿ ವಿದ್ಯುತ್ ವಿತರಣೆ ಪರವಾನಗಿ ಪಡೆಯಲು ಟಾಟಾ ಪವರ್ ಕಂಪನಿಯು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವುದನ್ನು ವಿರೋಧಿಸಿ, ಹೆಸ್ಕಾಂ ನೌಕರರು ಇಂದು ಕಾರವಾರದ ಬಾಂಡಿಶಿಟ್ಟಾದಲ್ಲಿರುವ ಪ್ರಧಾನ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಟಾಟಾ ಕಂಪನಿಯ ಈ ನಡೆ ನೌಕರರು, ರೈತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದ್ದು, ಆಯೋಗವು ಈ ಅರ್ಜಿಯನ್ನು ತಕ್ಷಣವೇ ತಿರಸ್ಕರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಹೆಸ್ಕಾಂ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯ ರಾಘು ನಾಯ್ಕ ಅವರು, ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ನೌಕರರ ಉದ್ಯೋಗ ಭದ್ರತೆಗೆ ದೊಡ್ಡ ಆಪತ್ತು ಎದುರಾಗಲಿದೆ.
ಅಷ್ಟೇ ಅಲ್ಲದೆ, ಸರ್ಕಾರದಿಂದ ಪ್ರಸ್ತುತ ಜಾರಿಯಲ್ಲಿರುವ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ರೈತರ ಪಂಪ್ಸೆಟ್ಗಳಿಗೆ ನೀಡಲಾಗುತ್ತಿರುವ ಉಚಿತ ವಿದ್ಯುತ್ ಸೌಲಭ್ಯಗಳು ಸಂಪೂರ್ಣವಾಗಿ ಬಂದ್ ಆಗಲಿವೆ. ಇದರಿಂದ ವಿದ್ಯುತ್ ಗ್ರಾಹಕರ ಮೇಲೆ ದರ ಏರಿಕೆಯ ಭಾರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ
ಇದೇ ಸಂದರ್ಭದಲ್ಲಿ ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯ್ಕ ಅವರು, ಟಾಟಾ ಕಂಪನಿಯು ಜಿಲ್ಲೆ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿದೆ. ಆದರೆ ಈ ಕಂಪನಿಯು ಯಾವುದೇ ವಿಶ್ವಾಸಾರ್ಹ ಅಂಶಗಳನ್ನು ಹೊಂದಿಲ್ಲದೇ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಸಾವಿರಾರು ಸಂಖ್ಯೆಯಲ್ಲಿ ಆಕ್ಷೇಪಣೆಗಳನ್ನು ಸಿದ್ಧಪಡಿಸಿ ಕೆಇಆರ್ಸಿಗೆ (KERC) ಸಲ್ಲಿಸಬೇಕು ಎಂದು ಕರೆ ನೀಡಿದರು.
ದೇಶದಲ್ಲೇ ಅತ್ಯಂತ ಹೆಚ್ಚು ಕೃಷಿ ಹವಾಮಾನ ವೈವಿಧ್ಯತೆ ಹೊಂದಿರುವ ಕರ್ನಾಟಕದಲ್ಲಿ 40 ಲಕ್ಷಕ್ಕೂ ಹೆಚ್ಚು ನೀರಾವರಿ ಪಂಪ್ ಸೆಟ್ ಬಳಸಲಾಗುತ್ತಿದೆ. ಖಾಸಗೀಕರಣದಿಂದ ನೇರ ನಗದು ವರ್ಗಾವಣೆ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಯಂತಹ ರೈತ ವಿರೋಧಿ ಕ್ರಮಗಳು ಜಾರಿಗೆ ಬಂದು, ಕೃಷಿ ಕ್ಷೇತ್ರ ಕುಂಠಿತಗೊಳ್ಳುವುದಲ್ಲದೆ ದೇಶದ ಆಹಾರ ಭದ್ರತೆಗೂ ಧಕ್ಕೆಯಾಗಲಿದೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಸಮಿತಿ ಸದಸ್ಯ ರಾಘವೇಂದ್ರ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ರೋಹಣಿ ಪೆಡ್ನೇಕರ್, ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ಗುನಗಿ, ಇಂಜಿನಿಯರ್ ಸಂಘದ ಪದಾಧಿಕಾರಿ ರಾಜು ಕಟಮನಿ, ಕಾರವಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಶಿವಮಲ್ಲು, ಕಾರ್ಯದರ್ಶಿ ರವಿ ಚಾಪೋಲೀಕರ್ ಹಾಗೂ ಕಾರವಾರ ತಾಲೂಕಿನ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ನೂರಾರು ಹೆಸ್ಕಾಂ ನೌಕರರು ಮತ್ತು ಮುಖಂಡರು ಪಾಲ್ಗೊಂಡಿದ್ದರು.




