- ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಗೆ ಪತ್ರ ಬರೆದ ಗ್ರಾಮಸ್ಥರು
- ಸೌಕರ್ಯ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಕ್ತ ನಿರ್ದೇಶನ ನೀಡಿಲು ಆಗ್ರಹ
ಮೂಲ ಸೌಕರ್ಯಗಳಿಗಾಗಿ 16 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೊದ್ದೂರು ಗ್ರಾಮದ ಸುತ್ತಮುತ್ತಲಿನ ನಿವಾಸಿಗಳು ಸೇರಿದಂತೆ ಕಾನ್ಸಿರಾಂ ನಗರದ ನಿವಾಸಿಗಳು ಈ ಬಾರಿಯ ವಿಧಾನಸಭಾ ಚುನಾವಣೆ ಬಹಿಷ್ಕಾರ ಮಾಡಲು ಮುಂದಾಗಿದ್ದು, ರಾಜ್ಯ ಚುನಾವಣಾಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಿವಾಸಿಗಳು ನೈಜ ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಚುನಾವಣಾ ಅಧಿಕಾರಿಗಳಗೆ ಪತ್ರ ಬರೆದಿದ್ದು, ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
“ಕೊಡಗು ಜಿಲ್ಲಾಧಿಕಾರಿಗಳು ನೀಡಿದ ಆಶ್ವಾಸನೆಯನ್ನು ಮೂಲೆಗೆ ತಳ್ಳಿ, ಬಡವರಿಗೆ ನೀಡಬೇಕಾಗಿರುವ ಸ್ಮಶಾನ ಭೂಮಿಯನ್ನು ಖಾಸಗಿ ಸಂಸ್ಥೆಗೆ ನೀಡಿ ಬಡವರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅಧಿಕಾರಿಗಳು ಸಂವಿಧಾನದ ಮೂಲ ಆಶಯಗಳನ್ನು ಮತ್ತು ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಸಬೇಕಾದ ಆಡಳಿತದ ವಿರುದ್ಧವಾಗಿ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.
“ಮಡಿಕೇರಿಯ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದರೂ ಈವರೆಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಡಳಿತ ವರ್ಗ ಸಂಪೂರ್ಣ ವಿಫಲವಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
“ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಮಗೆ ಕಾನೂನಾತ್ಮಕವಾಗಿ ದೊರೆಯಬೇಕಾಗಿದ್ದ ಜಮೀನುಗಳನ್ನು ಮತ್ತು ಮೂಲ ಸೌಕರ್ಯಗಳನ್ನು ಒದಗಿಸದೆ ಇರುವ ಕಾರಣ ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.
“ಅಧಿಕಾರಿಗಳು ಕೂಡಲೇ ಮಧ್ಯ ಪ್ರವೇಶ ಮಾಡಿ ಮಡಿಕೇರಿ ಜಿಲ್ಲಾಧಿಕಾರಿಗೆ ಸೂಕ್ತ ನಿರ್ದೇಶನ ನೀಡಿ ಸ್ಥಳೀಯ ಮತದಾರರ ಮೂಲ ಸೌಕರ್ಯದ ಸಮಸ್ಯೆಗಳನ್ನು ಬಗೆಹರಿಸಬೇಕು. ಮುಂದಿನ ಚುನಾವಣೆಯಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವದಲ್ಲಿ ಪಾಲುದಾರರಾಗುವಂತೆ ಅನುವು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವೈಯಕ್ತಿಕ ದ್ವೇಷಕ್ಕೆ ಕಾಫಿತೋಟ ನಾಶ ಮಾಡಿದ ಕಿಡಿಗೇಡಿಗಳು
“ಇಲ್ಲಿಯ ನಿವಾಸಿಗಳ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದಲ್ಲಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ಪ್ರಜಾಪ್ರಭುತ್ವದಲ್ಲಿ ನಿಜವಾಗಲೂ ಪಾಲುದಾರಿಕೆಯಲ್ಲಿ ಇರಬೇಕಾದ ಮತದಾರರ ಹಕ್ಕನ್ನು ಕಸಿದುಕೊಳ್ಳುವ ಆಡಳಿತ ವರ್ಗದ ಧೋರಣೆ ಖಂಡನೀಯ” ಎಂದಿದ್ದಾರೆ.
“ಸಮಸ್ಯೆಯನ್ನು ಬಗೆಹರಿಸುವ ಗುರುತರ ಜವಾಬ್ದಾರಿಯನ್ನು ಮುಖ್ಯ ಚುನಾವಣಾ ಆಯುಕ್ತಾರು ತೆಗೆದುಕೊಳ್ಳಬೇಕು. ಸಮಸ್ಯೆಯನ್ನು ಬಗೆಹರಿಸಿ ಇಲ್ಲಿನ ಮತದಾರರು ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ಈ ವೇಳೆ ನೈಜ ಹೋರಾಟಗಾರ ವೇದಿಕೆಯ ಎಚ್ ಎಂ ವೆಂಕಟೇಶ್ ಸೇರಿದಂತೆ ಸ್ಥಳೀಯ ನಿವಾಸಿಗಳು ಇದ್ದರು.