- ಮಡಿಕೇರಿ ಮತ್ತು ಮಂಗಳೂರು ಹೆದ್ದಾರಿಯಲ್ಲಿ ಕಾರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
- ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇನ್ನಾವಾ ಕಾರಿಗೆ ಖಾಸಗಿ ಬಸ್ ಡಿಕ್ಕಿ
ಮಡಿಕೇರಿ ಮತ್ತು ತುಮಕೂರು ಬಳಿ ಪ್ರತ್ಯೇಕ ಬಸ್ ಅಪಘಾತವಾಗಿದ್ದು, ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೆಎಸ್ಆರ್ಟಿ ಬಸ್ ಮತ್ತು ಮಾರುತಿ ಕಾರ್ ನಡುವೆ ಡಿಕ್ಕಿ ಆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನ ಮೃತಪಟ್ಟಿರುವ ಘಟನೆ ಮಡಿಕೇರಿ-ಮಂಗಳೂರು ನಡುವಿನ ಹೆದ್ದಾರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ 8 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಮಂಡ್ಯ ಜಿಲ್ಲೆಯ ಮದ್ದೂರು ಮೂಲದವರು ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಮಂಡ್ಯದಿಂದ ಮಂಗಳೂರಿಗೆ ತೆರಳುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿತ್ತು. ಈ ವೇಳೆ ಈ ಘಟನೆ ಸಂಭವಿಸಿದೆ.
ಈ ಸುದ್ದಿ ಓದಿದ್ದೀರಾ? : ಹೊಸ ತಲೆಮಾರಿಗೆ ಹಳೆಯ ನೆನಪು 4 | ಸಿಹಿ ನೀರಿನ ಕಣಜ ಅಕ್ಕಿತಿಮ್ಮನಹಳ್ಳಿ ಕೆರೆ ಮೇಲಿದೆ ‘ಹಾಕಿ ಕ್ರೀಡಾಂಗಣ’
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಗಾಯಗೊಂಡಿರುವ ಓರ್ವ ವ್ಯಕ್ತಿ ಮತ್ತು ಮಗು ಗಂಭೀರ ಸ್ಥಿತಿಯಲ್ಲಿದ್ದು, ಸುಳ್ಯ ಕೆವಿಜಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತುಮಕೂರಿನಲ್ಲಿಯೂ ಅಪಘಾತ
ಬೆಂಗಳೂರಿನಿಂದ ತುಮಕೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರ್ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹಿರೇಹಳ್ಳಿ ಸಮೀಪ ಇಂದು (ಶುಕ್ರವಾರ) ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಬೆಂಗಳೂರಿನ ವಿಜಯನಗರದ ನಿವಾಸಿಗಳೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.