- ಸಂಚಾರ ವ್ಯವಸ್ಥೆಯಲ್ಲಿ ತಪ್ಪು ಮಾಡುವವರನ್ನು ಸರಿದಾರಿಗೆ ತರುವ ಪ್ರಯತ್ನ
- ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿ ವ್ಯಾಪಾರ ಮಾಡುವವರ ವಿರುದ್ಧ ಕ್ರಮ
ಕೊಡಗು ಜಿಲ್ಲೆಯ ಗೋಣಿಕೊಪ್ಪಲು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಂಚಾರ ವ್ಯವಸ್ಥೆಯನ್ನು ಉತ್ತಮಗೊಳಿಸಲು, ವಾಹನ ಸವಾರರಿಗೆ ಎಚ್ಚರಿಕೆ ನೀಡಲು ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ತಪ್ಪು ಮಾಡಿದವರಿಗೆ ದಂಡ ಹಾಕುವುದು ಸರ್ಕಾರದ ಬೊಕ್ಕಸ ತುಂಬಿಸಲು ಅಲ್ಲ. ಬದಲಾಗಿ ತಪ್ಪಿಗೆ ದಂಡ ಹಾಕಿದಾಗ ಮುಂದಾಗುವ ತಪ್ಪುಗಳ ನಿಯಂತ್ರಣ ಮತ್ತು ಅನಾಹುತಗಳ ನಿಯಂತ್ರಿಸುವುದಕ್ಕಾಗಿ” ಎಂದು ಗೋಣಿಕೊಪ್ಪಲು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದೀಕ್ಷಿತ್ ಹೇಳಿದರು.
ಗೋಣಿಕೊಪ್ಪಲು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಬುಧವಾರ ಗ್ರಾಮ ಪಂಚಾಯಿತಿಯ ಸದಸ್ಯರ, ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಸದಸ್ಯರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಜಂಟಿ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಎಸ್ಐ ದೀಕ್ಷಿತ್, “ಜನರಲ್ಲಿ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಾಗ ಅವರ ವಿರುದ್ಧ ಪ್ರಕರಣ ದಾಖಲಿಸಬೇಕಾಗುತ್ತದೆ. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆದಾಗ ಜನ ಈ ಬಗ್ಗೆ ಎಚ್ಚೆತ್ತುಕೊಂಡು ವಾಹನ ಚಾಲನೆ ಮಾಡುತ್ತಾರೆ” ಎಂದರು.
“ಇದು ಕೇವಲ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಡುವ ಕ್ರಮವಾಗಿದೆ. ಸಂಚಾರ ವ್ಯವಸ್ಥೆಯಲ್ಲಿ ತಪ್ಪು ಮಾಡುವವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕಿದೆ. ಗೋಣಿಕೊಪ್ಪಲು ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆ ಸರಿಪಡಿಸಲು ಹಲವಾರು ಫಲಕಗಳನ್ನು ಅಳವಡಿಸಬೇಕಿದೆ. ವಾಹನವನ್ನು ಸರಿಯಾಗಿ ನಿಲುಗಡೆ ಮಾಡುವ ಸಲುವಾಗಿ ರಸ್ತೆಯಲ್ಲಿ ನಿಲುಗಡೆಗಾಗಿ ಪೇಂಟ್ ಮಾಡುವ ಅವಶ್ಯಕತೆ ಇದೆ” ಎಂದು ಹೇಳಿದರು.
“ನಾಲ್ಕು ಚಕ್ರದ ವಾಹನ ನಿಲುಗಡೆ ಮಾಡಬೇಕಾದ ಸ್ಥಳಗಳಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದಾರೆ. ಇದನ್ನು ಕೂಡಲೇ ನಿಯಂತ್ರಣ ಮಾಡಬೇಕು. ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿಕೊಂಡು ವ್ಯಾಪಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ” ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಸೌಮ್ಯ ಬಾಲು ಹೇಳಿದರು.
ಈ ಸುದ್ದಿ ಓದಿದ್ದೀರಾ? ಶಾಲಾ ಮಕ್ಕಳಿಗೆ ಬ್ಯಾಗ್ ಭಾರ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಗೋಣಿಕೊಪ್ಪಲು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸುನಿಲ್ ಮಾದಪ್ಪ ಮಾತನಾಡಿ, “ಸುಗಮ ಸಂಚಾರ ವ್ಯವಸ್ಥೆಗೆ ಚೇಂಬರ್ ಆಫ್ ಕಾಮರ್ಸ್ ನಿಂದ ಎಲ್ಲ ರೀತಿಯ ಸಹಕಾರಗಳನ್ನು ನೀಡುವುದಾಗಿ ಸಂಚಾರ ನಿಯಂತ್ರಣಕ್ಕೆ ಬೇಕಾದ ಫಲಕಗಳನ್ನು ಉದ್ಯಮಿಗಳಿಂದ ಪ್ರಾಯೋಜಿಸಲಾಗುವುದು” ಎಂದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಚೈತ್ರ ಚೇತನ್, ಮಾಜಿ ಅಧ್ಯಕ್ಷ ಕೆ ರಾಜೇಶ್, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.