ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ-ಮಾಂದಲ್ಪಟ್ಟಿ ಮಾರ್ಗದ ಜಂಕ್ಷನ್ ಹಾಗೂ ಉಡೋತ್ಮೊಟ್ಟೆ ಬಳಿಯ ಗಾಜಿನ ಸೇತುವೆಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ಸುರಕ್ಷತೆ ಮತ್ತು ನಿಯಮ ಪಾಲನೆಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಮೊದಲಿಗೆ ಅಬ್ಬಿ ಜಲಪಾತ ಮತ್ತು ಮಾಂದಲ್ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿಯ ಗಾಜಿನ ಸೇತುವೆ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ನಿರ್ಮಾಣಕ್ಕೆ ಅಗತ್ಯ ಅನುಮತಿಗಳನ್ನು ಪಡೆದಿರುವ ಬಗ್ಗೆ, ಎಂಜಿನಿಯರ್ಗಳ ದೃಢೀಕರಣ ಪತ್ರ, ಪ್ರವಾಸಿಗರ ವಾಹನ ನಿಲುಗಡೆ ವ್ಯವಸ್ಥೆ, ವೀಕ್ಷಣೆಗೆ ನಿಗದಿಪಡಿಸಿರುವ ಅವಧಿ ಹಾಗೂ ಶುಲ್ಕದ ವಿವರಗಳನ್ನು ಪರಿಶೀಲಿಸಿದರು. ಪ್ರವಾಸೋದ್ಯಮ ಇಲಾಖೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು.
ಬಳಿಕ ಉಡೋತ್ಮೊಟ್ಟೆ ಬಳಿಯ ಗಾಜಿನ ಸೇತುವೆಗೆ ಭೇಟಿ ನೀಡಿದ ಅವರು, ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸೂಚಿಸಿದರು. ವಾಹನ ನಿಲುಗಡೆಗೆ ಸಮರ್ಪಕ ಸ್ಥಳಾವಕಾಶ ಇಲ್ಲದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಮಳೆಗಾಲದ ಹಿನ್ನೆಲೆಯಲ್ಲಿ ಈ ಹಿಂದೆ ಎರಡೂ ಗಾಜಿನ ಸೇತುವೆಗಳ ವೀಕ್ಷಣೆಗೆ ವಿಧಿಸಲಾಗಿದ್ದ ನಿರ್ಬಂಧ ಕುರಿತು ಮರುಪರಿಶೀಲನೆ ನಡೆಸಲಾಗುವುದು. ಪ್ರವಾಸಿಗರು ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಅಬ್ಬಿ ಜಲಪಾತ-ಮಾಂದಲ್ಪಟ್ಟಿ ಜಂಕ್ಷನ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜೀಪುಗಳ ಕುರಿತು ಮಾಹಿತಿ ಪಡೆದ ಅವರು, ಪ್ರವಾಸಿಗರಿಂದ ಪಡೆಯಲಾಗುತ್ತಿರುವ ಬಾಡಿಗೆ ದರ, ವಾಹನ ಮತ್ತು ಚಾಲಕರ ಪರವಾನಗಿ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ವಿಚಾರಿಸಿದರು. ಪ್ರವಾಸಿಗರಿಗೆ ಯಾವುದೇ ರೀತಿಯ ಕಿರಿಕಿರಿ ಉಂಟಾಗದಂತೆ ಹಾಗೂ ದೂರುಗಳು ಬರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಚಾಲಕರಿಗೆ ಸೂಚಿಸಿದರು.
ಇದೇ ವೇಳೆ ಕಡಗದಾಳು ಪ್ರದೇಶದಲ್ಲಿರುವ ಹೋಂಸ್ಟೇ ಹಾಗೂ ರೆಸಾರ್ಟ್ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಭೂಮಿ ಕೃಷಿಯೇತರ ಚಟುವಟಿಕೆಗೆ ಪರಿವರ್ತನೆಯಾಗಿದೆಯೇ, ಗ್ರಾಮ ಪಂಚಾಯಿತಿಯಿಂದ ಅಗತ್ಯ ಅನುಮತಿಗಳನ್ನು ಪಡೆದಿರುವುದೇ, ಪೊಲೀಸ್ ಇಲಾಖೆಯ ಎನ್ಒಸಿ, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಹೋಂಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಸಿಸಿಟಿವಿ ಅಳವಡಿಕೆ, ಅತಿಥಿಗಳ ನೋಂದಣಿ ಪುಸ್ತಕ, ದೂರು ನಿರ್ವಹಣಾ ಪುಸ್ತಕ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ ಅವರ ಪಾಸ್ಪೋರ್ಟ್, ವಿಮಾನ ಟಿಕೆಟ್, ಗುರುತಿನ ಚೀಟಿ ವಿವರಗಳನ್ನು ದಾಖಲಿಸಿಕೊಳ್ಳುವುದರ ಜೊತೆಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ತಿಳಿಸಿದರು.
ಕಸ ವಿಲೇವಾರಿಯಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ಅತಿಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸಿಬ್ಬಂದಿಗಳ ಸಂಪೂರ್ಣ ವಿವರಗಳನ್ನು ದಾಖಲಿಸಿಕೊಂಡಿರಬೇಕು ಎಂದು ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ?ಮೈಸೂರಿನಲ್ಲಿ ಪಾಲಿಕೆಯ ವಿಶೇಷ ಕಾರ್ಯಾಚರಣೆ: 9 ಉದ್ದಿಮೆಗಳ ಮುಚ್ಚುವಿಕೆ, 16ಕ್ಕೆ ನೋಟಿಸ್.
ಪರಿಶೀಲನೆ ವೇಳೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಶಶಿಧರ್, ಸಮಾಲೋಚಕ ಜತಿನ್, ಗಾಜಿನ ಸೇತುವೆಗಳ ಮಾಲೀಕರು, ಹೋಂಸ್ಟೇ ಹಾಗೂ ರೆಸಾರ್ಟ್ಗಳ ಮಾಲೀಕರು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.




