2023ನೇ ಸಾಲಿನ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಪ್ರತಿಭಾ ಪುರಸ್ಕಾರ ಮತ್ತು ಜನಾಂಗದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಸೆಪ್ಟೆಂಬರ್ 24ರಂದು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಸಮಾರಂಭ ಆಯೋಜಿಸಲಾಗಿದೆ. ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.
“ಕೊಡವ ಮುಸ್ಲಿಂ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಉತ್ತೇಜಿಸಲು ಮತ್ತು ಜನಾಂಗದ ಸಾಧಕರನ್ನು ಗುರುತಿಸಿ ಸನ್ಮಾನಿಸುವುದರ ಮೂಲಕ ಇತರರಿಗೆ ಪ್ರೇರೇಪಣೆ ಮೂಡಿಸಲು ಕೆಎಂಎ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕೆಎಂಎ ವಿಶೇಷ ಪ್ರತಿಭಾ ಪುರಸ್ಕಾರ-2023 ನೀಡಿ ಗೌರವಿಸಲಾಗುವುದು” ಎಂದರು.
“ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೊಡವ ಮುಸ್ಲಿಂ ಅಸೋಸಿಯೇಷನ್ನ ಸ್ಥಾಪಕಾಧ್ಯಕ್ಷ ಕುವೇಂಡ ವೈ. ಹಂಝತುಲ್ಲಾ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಪಾಲ್ಗೊಳ್ಳಲಿದ್ದಾರೆ. ಪ್ರಸಿದ್ಧ ಚರಿತ್ರೆಗಾರರು ಮತ್ತು ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ತಂಬಂಡ ವಿಜಯ್ ಪೂಣಚ್ಚ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸ್ಥೆಯ ಪೋಷಕರಾದ ಮುಂಬೈನ ಉದ್ಯಮಿ ಅಕ್ಕಳತಂಡ ಎಸ್. ಮೊಯ್ದು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.
“ಸಂಸ್ಥೆಯ ವತಿಯಿಂದ ಪ್ರತಿ ವರ್ಷ ಕೊಡವ ಮುಸ್ಲಿಂ ಸಮುದಾಯದ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸುವ ಸಂಪ್ರದಾಯವಿದೆ. ಈ ವರ್ಷ ಕಿರಿಯವ ವಯಸ್ಸಿನಲ್ಲಿ ನ್ಯಾಯಾಧೀಶರಾಗಿರುವ ವಿರಾಜಪೇಟೆಯ ಆಲೀರ ಎಸ್. ಸಲ್ಮಾ, ಹೊದ್ದೂರು ಗ್ರಾ. ಪಂ.ಯಲ್ಲಿ 2ನೇ ಬಾರಿಗೆ ಅಧ್ಯಕ್ಷರಾಗಿರುವ ಸಂಸ್ಥೆಯ ಪದಾಧಿಕಾರಿಯಾದ ಕೊಟ್ಟಮುಡಿಯ ಹೆಚ್.ಎ ಹಂಸ ಮತ್ತು ಪ್ರಗತಿಪರ ಕೃಷಿಕರಾಗಿರುವ ಚಾಮಿಯಾಲ ಗ್ರಾಮದ ಕೂವಲೆರ ಹೆಚ್. ಹನೀಫ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಗುವುದು” ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆ.ಎಂ.ಎ. ಹಿರಿಯ ನಿರ್ದೇಶಕರಾದ ಚಿಮ್ಮಿಚ್ಚೀರ ಎ. ಅಬ್ದುಲ್ಲಾ ಹಾಜಿ, ಪದಾಧಿಕಾರಿಗಳಾದ ಅಕ್ಕಳತಂಡ ಎಸ್. ಮೊಯ್ದು, ಚಿಮ್ಮಿಚ್ಚೀರ ಕೆ. ಇಬ್ರಾಹಿಂ(ಉಮ್ಣಿ), ಪೊಯಕೆರ ಎಸ್. ಮೊಹಮ್ಮದ್ ರಫೀಕ್ ಉಪಸ್ಥಿತರಿದ್ದರು