ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ನೂರು ಕೋಟಿಗಿಂತ ಹೆಚ್ಚು ಅನುದಾನ ಕೊಟ್ಟಿದ್ದಾರೆ. ಕ್ಷೇತ್ರವನ್ನು ಮಾದರಿಯಾಗಿಸುವುದೇ ನನ್ನ ಗುರಿಯಾಗಿದ್ದು, ಅನುದಾನ ತಂದು ಅಭಿವೃದ್ಧಿಪಡಿಸುತ್ತಿದ್ದೇನೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ಕೋಲಾರ ತಾಲೂಕಿನ ವೇಮಗಲ್ ಹೋಬಳಿ ಚನ್ನಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಗಟ್ಟೂರು ಬಿಜೆಪಿ ಮುಖಂಡ ಹಾಗೂ ಗ್ರಾಪಂ ಸದಸ್ಯ ದೇವರಾಜ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನತೆಗೆ ಶುದ್ಧ ಕುಡಿಯುವ ನೀರಿನ ಘಟಕಗಳು ರಸ್ತೆಗಳು ನಿರ್ಮಾಣ ಬೀದಿದೀಪದ ವ್ಯವಸ್ಥೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಿದ ಕೀರ್ತಿ ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ನಮ್ಮ ಅಭಿವೃದ್ಧಿಯನ್ನು ಮೆಚ್ಚಿ ಬಿಜೆಪಿ ಮುಖಂಡರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವುದೇ ನಮ್ಮ ಮೊದಲ ಗುರಿ. ವೇಮಗಲ್ ಪಟ್ಟಣ ಪಂಚಾಯಿತಿ, ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನವನ್ನು ನೀಡುತ್ತೇವೆ. ಪಕ್ಷಕ್ಕಾಗಿ ದುಡಿಯಿರಿ ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಮಾಜಿ ಸಚಿವ ವರ್ತೂರು ಪ್ರಕಾಶ್ ಬಣ ತೊರೆದು ಕಾಂಗ್ರೆಸ್ ಪಕ್ಷಕ ಸೇರ್ಪಡೆಯಾದ ದೇವರಾಜ್ ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ ರವರು ಜೋಡತ್ತುಗಳಾಗಿ ತಾಲೂಕಿನ ಅಭಿವೃದ್ಧಿಗೆ ಹಗಲಿರಲು ಶ್ರಮಿಸುತ್ತಿದ್ದಾರೆ. ಇವರ ಅಭಿವೃದ್ಧಿಯನ್ನು ಮೆಚ್ಚಿ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

ಕ್ಯಾಲನೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನಷ್ಟು ಅಭಿವೃದ್ಧಿ ಪಡಿಸಬೇಕು. ಅದಕ್ಕಾಗಿ ನಾನು ಅವರ ಕೈ ಬಲಪಡಿಸಲು ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇನೆ ಹಾಗೂ ನನ್ನ ಮೇಲೆ ವಿಶ್ವಾಸ ಮತ್ತು ನಂಬಿಕೆ ಇಟ್ಟು ನಮ್ಮನ್ನ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಎಪಿಎಂಸಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ದೇವರಾಜ್ ತಿಳಿಸಿದರು.
ಇದನ್ನು ಓದಿದ್ದೀರಾ? ಬೆಳಗಾವಿ | ಮಹಿಳೆಯರ ಕೂಲಿ ಕೆಲಸದ ಪಯಣಕ್ಕೆ ಬೆಳಕು ತಂದ ‘ಶಕ್ತಿ ಯೋಜನೆ’
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ವೈ ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮುನಿರಾಜು, ಗ್ರಾಪಂ ಸದಸ್ಯ ಕುಮಾರ್, ಮೈಲಾಂಡಹಳ್ಳಿ ಮುರಳಿ, ರಘುಪತಿಹೊಸಳ್ಳಿ ನಾರಾಯಣಸ್ವಾಮಿ, ಬೈರಂಡಹಳ್ಳಿ ನಾರಾಯಣಸ್ವಾಮಿ, ನಾಗೇಶ್, ತಿಪ್ಪೇನಹಳ್ಳಿ ನಾಗೇಶ್, ಪ್ರಕಾಶ್, ಕೆವಿ ವೆಂಕಟೇಶಪ್ಪ, ಮುನಿ ಆಂಜಿನಪ್ಪ, ಮೆಡಿಕಲ್ ಮುನಿರಾಜು, ಚನ್ನಸಂದ್ರ ಮುಬಾರಕ್, ಶಶಿಧರ್, ಮುಂತಾದವರು ಇದ್ದರು.
