ಶಾಲೆಗೆ ರಜೆ ನೀಡಬೇಕೆಂದು ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಬೆರೆಸಿದ್ದಾನೆಂಬ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೇಳಿಬಂದಿದೆ.
ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಲೆಯ ವಿದ್ಯಾರ್ಥಿಗಳಿಗೆ ಏನಾದರೂ ಸಮಸ್ಯೆಯಾದರೆ, ರಜೆ ಕೊಡುತ್ತಾರೆಂದು ಭಾವಿಸಿದ್ದ ವಿದ್ಯಾರ್ಥಿ, ತನ್ನ ಊರಿಗೆ ಹೋಗುವ ಸಲುವಾಗಿ ನೀರಿಗೆ ಇಲಿ ಪಾಷಾಣ ಬರೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆತ ಪೋಷಕರಿಂದ ದೂರುವಿದ್ದ ಕಾರಣದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದೆ.