- ಬೇಸಿಗೆ ಕಾಲದಲ್ಲಿ ಕೆಲಸ ಹರಸಿ ಗುಳೆ ಹೋಗುತ್ತಿದ್ದ ಕೊಪ್ಪಳ ಜಿಲ್ಲೆಯ ಜನ
- ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಮನರೇಗಾ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಹೆಚ್ಚು ಒತ್ತು ನೀಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿ ಪ್ರತಿದಿನ ಲಕ್ಷಕ್ಕೂ ಅಧಿಕ ಮಂದಿಗೆ ಕೆಲಸ ನೀಡುವಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಪ್ರಸ್ತುತ (ಏ.26ರಂದು) ಮನರೇಗಾ ಯೋಜನೆಯಡಿ 9,15,433 ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಕೊಪ್ಪಳ ಜಿಲ್ಲೆಯಲ್ಲೇ ಅತಿ ಹೆಚ್ಚು ಅಂದರೆ 1,08,389 ಕೂಲಿಕಾರರಿಗೆ ಕೆಲಸ ನೀಡಿ ಪ್ರಥಮ ಸ್ಥಾನದಲ್ಲಿದೆ. ರಾಯಚೂರು 1,05,816 (ದ್ವಿತೀಯ ಸ್ಥಾನ), ಬೆಳಗಾವಿ 94,590 (ತೃತೀಯ ಸ್ಥಾನ), ಬಳ್ಳಾರಿ 86,069 (ನಾಲ್ಕನೇ ಸ್ಥಾನ), ಗದಗ 78,334 (ಐದನೇ ಸ್ಥಾನ), ವಿಜಯನಗರ ಜಿಲ್ಲೆಯೂ 68,381 ಕೂಲಿಕಾರರಿಗೆ ಕೆಲಸ ನೀಡಿ ಆರನೇ ಸ್ಥಾನದಲ್ಲಿದೆ. ಉಳಿದ ಜಿಲ್ಲೆಯವರು ನಂತರದ ಸ್ಥಾನದಲ್ಲಿದ್ದಾರೆ.
ಗುಳೆ ತಡೆಯುವಲ್ಲಿ ಕೊಪ್ಪಳ ಜಿಲ್ಲೆ ಯಶಸ್ವಿ: ಪ್ರತಿ ವರ್ಷ ಬೇಸಿಗೆ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರಿಗೆ ಊರಲ್ಲಿ ಕೆಲಸವಿಲ್ಲದ ಕಾರಣದಿಂದಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರ ಮಾರ್ಗದರ್ಶನದಲ್ಲಿ ಮನರೇಗಾ ಯೋಜನೆಯಡಿ ಈ ಬಾರಿ ಐಇಸಿ ಚಟುವಟಿಕೆಯಡಿ ಹೆಚ್ಚು ಪ್ರಚಾರ ಕಾರ್ಯಕ್ರಮಗಳನ್ನು ಮಾಡಿ ಕೂಲಿಕಾರರಿಗೆ ಅಗತ್ಯ ಮಾಹಿತಿ ಒದಗಿಸಲಾಯಿತು.
2023ರ ಏಪ್ರಿಲ್ 1ರಿಂದ ಮನರೇಗಾ ಕೂಲಿ ಮೊತ್ತವು 316ರೂ.ಗೆ ಹೆಚ್ಚಳವಾಗಿದೆ. ಈ ಬಗ್ಗೆ ಕೂಲಿಕಾರರಿಗೆ ಅರಿವು ಮೂಡಿಸಿ ಯೋಜನೆಯತ್ತ ಕರೆತಂದು ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ನೀಡಲಾಗುತ್ತಿದೆ. ಬೆಳಗಾವಿ ಹಾಗೂ ಕಲಬುರಗಿ ವಿಭಾಗ ವ್ಯಾಪ್ತಿಯ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಮನರೇಗಾ ಕೆಲಸದಲ್ಲಿ ಶೇ.30ರಷ್ಟು ರಿಯಾಯಿತಿ ಸೌಲಭ್ಯವನ್ನು ನೀಡಿದೆ. ಈ ಬಗ್ಗೆ ಕೊಪ್ಪಳ ಜಿಲ್ಲೆಯ ಕೂಲಿಕಾರರಿಗೆ ಹೆಚ್ಚು ಮಾಹಿತಿ ನೀಡಿದ್ದರಿಂದ ಜನ ಗುಳೆ ಬಿಟ್ಟು ತಮ್ಮ ಗ್ರಾಮದಲ್ಲಿಯೇ ಮನರೇಗಾ ಅಡಿ ಕೆಲಸ ಮಾಡುತ್ತಿದ್ದಾರೆ.
ಕೂಲಿಕಾರರಿಗೆ ಮತದಾನದ ಮಹತ್ವ: ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಚುನಾವಣೆಯಲ್ಲಿ ಉತ್ತಮ ಮತದಾನ ಆದರೂ ಕೆಲ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿತ್ತು. ಸದ್ಯ ಮನರೇಗಾ ಅಡಿ ಜಿಲ್ಲೆಯ 153 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೂಲಿಕಾರರು ಕೆರೆ ಹೂಳೆತ್ತುವುದು, ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾರೆ. ಈ ಕಾಮಗಾರಿ ಸ್ಥಳಗಳಲ್ಲಿ ಕೂಲಿಕಾರರಿಗೆ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಇವಿಎಂ, ವಿವಿಪ್ಯಾಟ್ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಅಣಕು ಮತದಾನ ಮಾಡಿಸುವುದು, ಮತದಾನ ಜಾಗೃತಿ ಗೀತೆಗಳನ್ನು ಪ್ರಚುರ ಪಡಿಸುವುದು ಹಾಗೂ ಕೂಲಿಕಾರರಿಗೆ ಮತದಾನದ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ. ಹೀಗೆ ವ್ಯಾಪಕ ಮತದಾನ ಜಾಗೃತಿ ಪ್ರಚಾರ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೂ ಕೊಪ್ಪಳ ಜಿಲ್ಲಾ ಪಂಚಾಯತಿ ಮುಂದಾಗಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ
“ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆ ಕಾಲದಲ್ಲಿ ಜನ ಕೆಲಸ ಹರಸಿ ಗುಳೆ ಹೋಗುತ್ತಿದ್ದರು. ಹೀಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಅನುಷ್ಠಾನದಿಂದ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆ ಹೆಚ್ಚು ಮಾನವ ದಿನಗಳ ಸೃಜನೆ ಮಾಡಲು ಅನುಕೂಲವಾಗಿದೆ. ಮನರೇಗಾ ಯೋಜನೆಯಿಂದ ಜನರ ಗುಳೆಯೂ ತಪ್ಪಿದೆ. ಮನರೇಗಾ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಕಳೆದ ಒಂದು ತಿಂಗಳಿಂದ ನಿರಂತರವಾಗಿ ಮತದಾನ ಜಾಗೃತಿ ಕಾರ್ಯಕ್ರಮ ಮಾಡುತ್ತಾ ಮತದಾನದ ಮಹತ್ವ ತಿಳಿಸಲಾಗುತ್ತಿದೆ” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.