ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರನ್ನು ಅಮಾನತುಗೊಳಿಸುವಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಶಿಫಾರಸು ಮಾಡಿದ್ದಾರೆ.
ಲೇಔಟ್ ಅನುಮೋದನೆಗಾಗಿ ಮಾಲೀಕರೊಬ್ಬರಿಗೆ 3 ಲಕ್ಷ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದಾರೆಂಬ ಆರೋಪದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಶಿಫಾರಸು ಮಾಡಲಾಗಿದೆ.
ಲಕ್ಷ್ಮಣ್ ಕಟ್ಟಿಮನಿ ಲೇಔಟ್ ಅನುಮೋದನೆಗಾಗಿ ಹಣ ಬೇಡಿದ್ದಾರೆಂಬ ವರದಿಗಳು ದಿನಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಪ್ರಕಟವಾಗಿದ್ದವು. ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್ ನೀಡಲಾಗಿತ್ತು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸಲ್ಲಿಸಿರುವ ಪ್ರಾಥಮಿಕ ವರದಿಯಲ್ಲಿ, ಲಕ್ಷ್ಮಣ್ ಕಟ್ಟಿಮನಿ ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ವೃತ್ತಿ ನೈತಿಕತೆಯನ್ನು ಮರೆತು, ಕರ್ತವ್ಯಶ್ರದ್ಧೆ ಇಲ್ಲದೆ ಹಣದ ಬೇಡಿಕೆ ಇಟ್ಟಿರುವುದು ಸಾಬೀತಾಗಿದೆ ಎಂದು ತಿಳಿಸಲಾಗಿದೆ. ಸರ್ಕಾರಿ ನೌಕರನಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ, ಸರ್ಕಾರಿ ಕೆಲಸ ನಿರ್ವಹಿಸುವಲ್ಲಿ ಭ್ರಷ್ಟತನದ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
This video cannot be played in your browser. Open the video directly
ಈ ವರದಿಯ ಆಧಾರದ ಮೇಲೆ, ಸದರಿ ನೌಕರರ ವಿರುದ್ಧ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಕೋರಿ ಪೌರಾಡಳಿತ ನಿರ್ದೇಶನಾಲಯ, ಬೆಂಗಳೂರು ಇವರಿಗೆ ಜಿಲ್ಲಾಧಿಕಾರಿಗಳು ಶಿಫಾರಸು ಮಾಡಿದ್ದಾರೆ.
ಇದೇ ವೇಳೆ ಲಕ್ಷ್ಮಣ್ ಕಟ್ಟಿಮನಿ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ, ಸಕ್ಷಮ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಕನಕಗಿರಿ ಪಟ್ಟಣ ಪಂಚಾಯಿತಿಯ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುವಂತೆ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಪಟ್ಟಣ ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್ ಅವರಿಗೆ ಮುಖ್ಯಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ವಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.





