ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಗ್ರಾಮೀಣ ಭಾಗದ ಜನರಿಗೆ ನಳ್ಳಿ ನೀರಿನ ಸಂಪರ್ಕ ಒದಗಿಸುವ ಜಲ ಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು. ಕೆಲವೊಂದು ಭಾಗಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಭೂಮಿಯಲ್ಲಿ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಒಪ್ಪಿಗೆಗಳನ್ನು ಶೀಘ್ರದಲ್ಲಿಯೇ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಅರಣ್ಯ ಇಲಾಖೆಯವರು ಸಹ ಈ ಕಾರ್ಯಗಳಿಗೆ ಸ್ಪಂದಿಸಬೇಕೆAದು ಸೂಚನೆ ನೀಡಿದರು.
ಕುಡಿಯುವ ನೀರಿನ ಕೆಲವು ಕಾಮಗಾರಿಗಳು ಇತರೆ ಸಮಸ್ಯೆಗಳಿಂದಾಗಿ ಕೈಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತಿವೆ. ಇವುಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಈ ಸಂಬಂಧ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಿ, ಸಮಸ್ಯೆಗಳನ್ನು ಬಗೆಹರಿಸಿ, ಪ್ರಗತಿ ಸಾಧಿಸಬೇಕು ಎಂದ ಅವರು, ಕಳಪೆ ಕಾಮಗಾರಿಗಳ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾಮಗಾರಿಗಳು ಲೋಪಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಜಿಲ್ಲೆಯ ಕಾಡಂಚಿನಲ್ಲಿ ವಾಸವಿರುವ ಕೊರಗ ಸಮುದಾಯದವರ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ ನೀಡಬೇಕು. ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅವರುಗಳು ಅರ್ಜಿ ಸಲ್ಲಿಸಲು ಮುಂದೆ ಬರುವುದಿಲ್ಲ. ಜಿಲ್ಲೆಯಲ್ಲಿ 182 ಕ್ಕೂ ಹೆಚ್ಚು ಹಾಡಿಗಳಲ್ಲಿ ಈ ಸಮುದಾಯದವರು ವಾಸವಿದ್ದಾರೆ. ಅವರು ಇರುವಲ್ಲಿಗೆ ಹೋಗಿ ಅವರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಅನ್ನು ನೀಡುವುದರೊಂದಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಮುಂದಾಗಬೇಕು ಎಂದ ಅವರು, ವಸತಿ ಕಾರ್ಯಕ್ರಮದ ಅಡಿ ಇವರಿಗೆ ಮಂಜೂರಾಗಿರುವ ಮನೆ ನಿರ್ಮಾಣದ ಕಾಮಗಾರಿಗಳನ್ನು ಪ್ರಗತಿಯನ್ನು ಹೆಚ್ಚಿಸಬೇಕು. ಸಾಧ್ಯವಾದಲ್ಲಿ ಖಾಸಗಿ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ 1412 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈಗಾಗಲೇ ಕೈಗೊಂಡಿರುವ ಹೆಬ್ರಿ, ಪರ್ಕಳ, ಕರಾವಳಿ ಜಂಕ್ಷನ್ನಿಂದ ಮಲ್ಪೆ ವರೆಗೆ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಮುಗಿಸಿ, ಪರಿಹಾರ ಹಣವನ್ನು ಸಂತ್ರಸ್ತರಿಗೆ ತ್ವರಿತವಾಗಿ ಪಾವತಿಸಿ, ಕಾಮಗಾರಿಯ ವೇಗ ಹೆಚ್ಚಿಸಬೇಕು ಎಂದ ಅವರು, ಯಾವುದೇ ಕಾಮಗಾರಿಗಳನ್ನು ಆರಂಭಿಸುವ ಮುನ್ನ ಅಗತ್ಯವಿರುವ ಸಾಮಾಗ್ರಿಗಳನ್ನು ಮೊದಲೇ ಸಂಗ್ರಹ ಮಾಡಿದ್ದಲ್ಲಿ ಕಾಮಗಾರಿಯು ತ್ವರಿತಗತಿಯಲ್ಲಿ ಪೂರ್ಣಗೊಳ್ಳಲು ಸಹಕಾರಿಯಾಗಲಿದೆ ಎಂದರು.
ಜಿಲ್ಲೆಯಲ್ಲಿ ಕೈಗೊಂಡಿರುವ ಹೆಜಮಾಡಿ ಬಂದರು ಕಾಮಗಾರಿಯ ಪ್ರಗತಿಯನ್ನು ಹೆಚ್ಚಿಸಬೇಕು. ಭೂ ಸ್ವಾಧೀನ ಪರಿಹಾರಧನವನ್ನು ಜನರಿಗೆ ಆದಷ್ಟು ಬೇಗ ವಿತರಿಸಬೇಕು. ಕಾಮಗಾರಿಯ ವಿವರಗಳನ್ನು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಹಂಗಾರಕಟ್ಟೆ, ಗಂಗೊಳ್ಳಿ ಹಾಗೂ ಮರವಂತೆಯಲ್ಲಿ ಕೋಸ್ಟಲ್ ಬರ್ತ್ ಅಭಿವೃದ್ಧಿ ಕಾಮಗಾರಿಗಳು ಹಾಗೂ ಹೊರಬಂದರು ವಿಸ್ತರಣಾ ಯೋಜನೆಗಳ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದರು.
ಮಹತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿ ಶಾಶ್ವತ ಕಾಮಗಾರಿಗಳನ್ನು ಸೃಜನಿಸಲು ಅವಕಾಶವಿದ್ದು, ಜಿಲ್ಲೆಯಲ್ಲಿ ಇದರ ಪ್ರಗತಿ ಹೆಚ್ಚಬೇಕು ಎಂದ ಅವರು, ಈ ಯೋಜನೆಯಡಿ ಕಾಲುಸಂಕ ನಿರ್ಮಿಸಲು ಸಹ ಅವಕಾಶವಿದ್ದು, ಇದರ ಸದುಪಯೋಗ ಪಡಿಸಿಕೊಂಡು ಕರಾವಳಿ ಭಾಗಗಳಲ್ಲಿ ಅಗತ್ಯವಿರುವೆಡೆ ಕಾಲಸಂಕ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಪ್ರಧಾನಮಂತ್ರಿ ಮತ್ತು ವಂದನಾ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆದ್ಯತೆಯ ಮೇಲೆ ಆಗಬೇಕು. ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು ಎಂದರು. ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಗಳು ಹಾಳಾಗಿವೆ. ಇವುಗಳ ನಿರ್ವಹಣಾ ಅವಧಿಯೂ ಮಿಗಿದಿದೆ. ಸಾಮಾನ್ಯವಾಗಿ ಕಾಂಕ್ರೀಟ್ ರಸ್ತೆಗಳು ಹದಿನೈದು ವರ್ಷ ಬಾಳಿಕೆ ಬರಬೇಕು. ಆದರೆ, ಆರೇಳು ವರ್ಷದಲ್ಲಿಯೇ ರಸ್ತೆ ಹಾಳಾಗಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ನೋಟೀಸ್ ನೀಡಿ, ಅವುಗಳ ಸರಿಪಡಿಸುವ ಕಾರ್ಯ ಮಾಡಬೇಕು ಎಂದರು.
ಜಿಲ್ಲೆಯ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸುವ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ದೊರಕುವಂತಾಗಬೇಕು. ಮೊದಲ ಹಂತದಲ್ಲಿ ಆಯ್ದ 25 ರಿಂದ 30 ಉತ್ಪನ್ನಗಳನ್ನು ಮಾತ್ರ ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದ್ದು. ಮುಂದಿನ ದಿನಗಳಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಎಲ್ಲಾ ಉತ್ಪನ್ನಗಳನ್ನು ಉಡುಪಿ ಸಂಜೀವಿನಿ ಬ್ರಾಂಡ್ ಅಡಿಯಲ್ಲಿ ತರಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಅಮವಾಸೆಬೈಲ್ ಗ್ರಾಮದ ಸಂಜೀವಿನ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಅಪ್ಪೆ ಮಿಡಿ ಉಪ್ಪಿನಕಾಯಿ ಹಾಗೂ ಹಳ್ಳಿಹೊಳೆ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಕೃತಕ ಆಭರಣಗಳನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಶಾಸಕರುಗಳಾದ ಯಶ್ಪಾಲ್ ಎ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.