ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಹಾಗೂ ಜಿಲ್ಲೆಯಲ್ಲಿರುವ ಎಲ್ಲ ವಾಣಿಜ್ಯ ಸಂಕೀರ್ಣಗಳು, ಅಂಗಡಿ ಮುಂಗಟ್ಟುಗಳು, ಕಚೇರಿಗಳಲ್ಲಿ ನಾಮಫಲಕವನ್ನು ಕನ್ನಡ ಭಾಷೆಯಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದ್ದಾರೆ.
ನಾಮಫಲಕ ಹಾಕುವ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. “ಕರ್ನಾಟಕದಲ್ಲಿ ಕನ್ನಡವು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಸರ್ಕಾರದ ಎಲ್ಲ ಕಚೇರಿಗಳ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು. ಜಿಲ್ಲೆಯಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು” ಎಂದು ಸೂಚಿಸಿದ್ದಾರೆ.
“ಕರ್ನಾಟಕ ರಾಜ್ಯ ರಚನೆಯಾಗಿ 68 ವರ್ಷಗಳಾಗಿದ್ದು, ಕನ್ನಡವನ್ನು ಸಂಪರ್ಕ ಭಾಷೆಯಾಗಿ ಅಧಿಕೃತವಾಗಿ ಮತ್ತು ಸಾರ್ವಜನಿಕವಾಗಿ ಬಳಕೆ ಮಾಡುವುದು ಅಗತ್ಯವಾಗಿದೆ. ಕನ್ನಡ ಭಾಷೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಯಾಗಿದ್ದು, ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಭಾಷೆಯಾಗಿದೆ. ಕೇಂದ್ರ ಸರ್ಕಾರವು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಘೋಷಣೆ ಮಾಡಿದ್ದು, ಕನ್ನಡ ಭಾಷೆಯು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸ್ಥಾನಮಾನ ಗಳಿಸಿದೆ. ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯಲ್ಲಿ ಜಿಲ್ಲೆಯಲ್ಲಿ ಪ್ರತಿಯೊಂದು ಕಾರ್ಯ ಸಂಸ್ಥೆಗಳು ತಮ್ಮ ನಾಮಫಲಕಗಳನ್ನು ಕನ್ನಡ ಭಾಷೆಯಲ್ಲೇ ಅಳವಡಿಸಬೇಕು” ಎಂದು ತಿಳಿಸಿದ್ದಾರೆ.
“ಕನ್ನಡ ಭಾಷೆಯಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ನಾಮಫಲಕಗಳನ್ನು ಬರೆಸಬೇಕು. ಇತರೆ ಭಾಷೆಗಳನ್ನು ಬಳಸಿರುವ ಸಂದರ್ಭಗಳಲ್ಲಿ, ಆ ಭಾಷೆಯಲ್ಲಿರುವ ಹೆಸರು ಮತ್ತು ಪದಗಳು ಕನ್ನಡ ಆವೃತ್ತಿಯ ಕೆಳಗೆ ಬರಬೇಕು. ಕನ್ನಡ ನಾಮಫಲಕವನ್ನು ಹೆಚ್ಚು ಎದ್ದು ಕಾಣುವಂತೆ ಬರೆಯಬೇಕು ಹಾಗೂ ಇತರೆ ಭಾಷೆಗಳಿಂತಲೂ ಹೆಚ್ಚು ಸ್ಥಳಾವಕಾಶವನ್ನು ಕನ್ನಡ ಭಾಷೆಗೆ ಕಲ್ಪಿಸಬೇಕು” ಎಂದು ಸ್ಪಷ್ಟಪಡಿಸಿದ್ದಾರೆ.
“ಪರವಾನಗಿ ನವೀಕರಣ ಸಮಯದಲ್ಲಿ ಪ್ರಧಾನವಾಗಿ ಕನ್ನಡ ಭಾಷೆಯಲ್ಲಿ ನಾಮಫಲಕ ಇರುವ ಬಗ್ಗೆ ಸ್ಥಳೀಯ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸದವರ ಪರವಾನಗಿ ರದ್ದು ಪಡಿಸಲು ಕ್ರಮತೆಗೆದುಕೊಳ್ಳುವುದು ಮತ್ತು ದಂಡ ವಿಧಿಸಲಾಗುವುದು. ಕರ್ನಾಟಕದಲ್ಲಿ ಎಲ್ಲಾ ಆಡಳಿತಾತ್ಮಕ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನು ಪ್ರಧಾನವಾಗಿ ಬಳಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ” ಎಂದು ತಿಳಿಸಿದ್ದಾರೆ.