ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು.
ಮಂಡ್ಯದಲ್ಲಿ ನಡೆದ ಜಿಲ್ಲಾ ಬ್ಯಾಂಕರುಗಳ ಸಭೆಯಲ್ಲಿ ಆನ್ಲೈನ್ ವೇದಿಕೆ ಮೂಲಕ ಭಾಗಿಯಾಗಿ ಮಾತನಾಡಿದ ಸಚಿವರು, “ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು” ಎಂದು ಹೇಳಿದರು.
“ಕೃಷಿಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರ ಸಾಲದ ಬಡ್ಡಿ ಹೆಚ್ಚಾಗಿದೆ ಎಂದು ದಿನವೂ ದೂರುಗಳು ಬರುತ್ತಿವೆ. ಅದಕ್ಕಾಗಿಯೇ ಅವರು ಒಂದೇ ಬಾರಿಗೆ ಹಣ ಪಾವತಿ ಮಾಡಲು ಶ್ರಮಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಬ್ಯಾಂಕುಗಳು ಸೌಜನ್ಯದಿಂದ ವರ್ತಿಸಬೇಕು. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಠಿಣವಾಗಿ ನಡೆದುಕೊಳ್ಳಬೇಡಿ” ಎಂದು ಕೇಂದ್ರ ಸಚಿವರು ಸ್ಪಷ್ಟ ಸೂಚನೆ ಕೊಟ್ಟರು.
“ಯುವಕರು, ಮಹಿಳೆಯರು, ಕೃಷಿಕರು ಕೇಂದ್ರದ ಯೋಜನೆಗಳ ಸೌಲಭ್ಯ ಪಡೆಯಲು ಬ್ಯಾಂಕುಗಳು ಸೇತುವೆಯಾಗಿವೆ. ಇದು ಮತ್ತಷ್ಟು ವಿಸ್ತೃತವಾಗಿ ಜನರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಸಚಿವರು ಸಲಹೆ ನೀಡಿದರು.
ಇದೇ ವೇಳೆ ವಾರ್ಷಿಕ ಆರ್ಥಿಕ ಕ್ರೆಡೀಡ್ ರಿಪೋರ್ಟ್ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ಜಿಲ್ಲೆಯ ಬ್ಯಾಂಕ್ ಗಳ ಮುಖ್ಯಸ್ಥರು ಭಾಗಿಯಾಗಿದ್ದರು.