ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂತಹ ಎಲ್ಲ ಕೊಲೆ ಪ್ರಕರಣಗಳನ್ನು ಹಿರಿಯ ಪ್ರಾಮಾಣಿಕ ಪೊಲೀಸ್ ಅಧಿಕಾರಿಯೊಬ್ಬರು ವಿಚಾರಣೆ ನಡೆಸಬೇಕು. ಹತ್ಯೆಗಳ ಹಿಂದಿರುವ ಎಲ್ಲ ಸಂಚುಕೋರರು ಮತ್ತು ಸೂತ್ರಧಾರರನ್ನು ಜೈಲಿಗೆ ಕಳುಹಿಸಬೇಕು” ಎಂದರು.
“ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದೆ. ಈ ಹೊತ್ತಿನಲ್ಲಿ, ಕೋಮುವಾದಿ ಶಕ್ತಿಗಳು ಧರ್ಮದ ಹೆಸರಿನಲ್ಲಿ ಕೊಲೆಗಳ ಮೂಲಕ ಶಾಂತಿ ಕದಡಲು ಪ್ರಯತ್ನಿಸುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ರಾಜಕೀಯದಿಂದಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಹಲವಾರು ಮುಗ್ಧ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ” ಎಂದರು.
“ಕಾಂಗ್ರೆಸ್ ಸರ್ಕಾರವು ಕೋಮು ಕೊಲೆಗಳನ್ನು ಪ್ರಮುಖ ವಿಷಯವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.