ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಮ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಮೇ 1ರಂದು ನಡೆದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಜರುದ್ದೀನ್ ಅಲಿಯಾಸ್ ಅಜರ್ ಅಜ್ಜು, ಅಬ್ದುಲ್ ಖಾದರ್ ಅಲಿಯಾಸ್ ನೌಫಲ್ (24) ಹಾಗೂ ವಾಮಂಜೂರು ನೌಷಾದ್ ಅಲಿಯಾಸ್ ಚೊಟ್ಟೆ ನೌಷದ್ ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪೊಲೀಸರು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.
ಪೊಲೀಸರ ಪ್ರಕಾರ, ಆರೋಪಿ ಅಜರುದ್ದೀನ್ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ನೀಡಿ ಕೃತ್ಯಕ್ಕೆ ಸಹಕರಿಸಿದ್ದಾನೆ. ಈತನ ವಿರುದ್ಧ ಈ ಹಿಂದೆ ಮೂರು ಕಳವು ಪ್ರಕರಣಗಳು ದಾಖಲಾಗಿವೆ. ಮತ್ತೋರ್ವ ಆರೋಪಿ ಅಬ್ದುಲ್ ಖಾದರ್ ಕೊಲೆ ನಡೆದ ನಂತರ ಆರೋಪಿಗಳು ಪರಾರಿಯಾಗಲು ಸಹಾಯ ಮಾಡಿದ್ದನು.
ಪ್ರಮುಖ ಆರೋಪಿಯಾದ ನೌಷದ್ ಸುಹಾಸ್ ಶೆಟ್ಟಿಯ ಕೊಲೆಗೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದನು. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಆರು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಜರುದ್ದೀನ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ನನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಈ ಕೊಲೆ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆ ಕಾರ್ಯವನ್ನು ಮುಂದುವರಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
