- ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ: ಸಿಎಂ ಆರೋಪ
- ಛತ್ತೀಸಗಢ ಸರ್ಕಾರ ಒಂದು ತಿಂಗಳಿಗೆ ಮಾತ್ರ ಅಕ್ಕಿ ನೀಡಲು ಮುಂದೆ ಬಂದಿದೆ
ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಭಾರತೀಯ ಆಹಾರ ನಿಗಮ (ಎಫ್ಸಿಐ) ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದರು.
“ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರಮುಖೇನ ತಿಳಿಸಿದ್ದರು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ಸಿಐಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದೆ ಎಂದಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಸ್ವದೇಶದ ಸಮಸ್ಯೆಗಳಿಗಿಂತ ವಿದೇಶದ ಜಯಘೋಷಗಳೇ ಪ್ರಿಯವಾದವೇ?
“ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯುವ ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸಗಢ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.