ಕಲಬುರಗಿ ಜಿಲ್ಲೆಯ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ಒಂದು ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ ₹50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ವಿಕಾಸೌಧದ ಕಚೇರಿಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಜವಳಿ ಪಾರ್ಕ್ ಸಜ್ಜುಗೊಳಿಸಲು ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸುವ ಸಂಬಂಧ ಸಭೆ ನಡೆಸಿ, ಚರ್ಚಿಸಲಾಯಿತು.
ಪಾರ್ಕ್ ಅವಶ್ಯಕತೆಗಳಿಗನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅವಶ್ಯಕತೆಯಿದ್ದು, ಮದ್ರಿ ಗ್ರಾಮದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಚಿವ ಖರ್ಗೆ ಚರ್ಚಿಸಿದರು.

ಪಾರ್ಕ್ ಆವರಣದಲ್ಲಿನ ಕೆರೆಯನ್ನು ಪುನರ್ಜೀವಗೊಳಿಸುವುದು, ಮಳೆನೀರು ಕೊಯ್ಲು ಪದ್ಧತಿ ಅಳವಡಿಕೆ ಮೂಲಕ ನೀರನ್ನು ಬಳಸಿಕೊಳ್ಳುವ ಪರ್ಯಾಯ ವ್ಯವಸ್ಥೆಗಳನ್ನೂ ಕೂಡ ಮಾಡಲು ಸೂಚಿಸಿದರು. ಜವಳಿ ಪಾರ್ಕ್ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿದ ಸಚಿವರು, ದೀರ್ಘಕಾಲ ಬಾಳಿಕೆ ಬರುವ ರಸ್ತೆಗಳನ್ನು ನಿರ್ಮಿಸಲು ತಿಳಿಸಿದರು.
ಜವಳಿ ಪಾರ್ಕ್ ಆವರಣದಲ್ಲಿ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಮಿತವ್ಯಯ ಮಾಡಲು ಸಲಹೆ ನೀಡಿದ್ದು, ಉಳಿದಂತೆ ಜವಳಿ ಪಾರ್ಕ್ಗೆ 180 ಮೆಗಾ ವ್ಯಾಟ್ ವಿದ್ಯುತ್ ಸಂಪರ್ಕ ಪೂರೈಸುವ ಸಂಬಂಧ 220 ಕೆ.ವಿ ಪವರ್ ಸಬ್ಸ್ಟೇಷನ್ ನಿರ್ಮಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮನವಿಯಂತೆ ಪಾರ್ಕ್ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದರು.
ಇದನ್ನು ಓದಿದ್ದೀರಾ? ಡೆಂಘೀಯನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ರಾಜ್ಯ ಸರ್ಕಾರ
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ (ಜವಳಿ) ವಿಪುಲ್ ಬನ್ಸಾಲ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜವಳಿ ಅಭಿವೃದ್ಧಿ ಆಯುಕ್ತೆ ಕೆ.ಜ್ಯೋತಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
