ಮುಂಗಾರು ತಡವಾಗಿ ಆರಂಭವಾಗಿದ್ದು, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯ ಜನರು ನಿರಾಳವಾಗಿದ್ದರು. ಆದರೆ, ಈ ವರ್ಷ ಮುಂಗಾರು ಮಳೆ ವಿಳಂಬವಾಗಿದ್ದು, ನೀರಿನ ಸಮಸ್ಯೆ ಎದುರಾಗಿದೆ.
ಈ ವರ್ಷ ಏಪ್ರಿಲ್, ಮೇ ಮತ್ತು ಜೂನ್ನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯಲ್ಲಿ ಈ ಮೂರು ತಿಂಗಳಲ್ಲಿ 4.1 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ, ಏಪ್ರಿಲ್ನಲ್ಲಿ ಕೇವಲ 1.8 ಮಿ.ಮೀ, ಮೇನಲ್ಲಿ 2.8 ಮಿ.ಮೀ ಮತ್ತು ಜೂನ್ನಲ್ಲಿ ಇದುವರೆಗೂ ಮಳೆಯೇ ಆಗಿಲ್ಲ. ಬಿಸಿಲಿನಿಂದಾಗಿ ಕೆರೆ, ಕೊಳಗಳಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿಯುತ್ತಿದೆ. ಹೀಗಾಗಿ, ನೀರಿನ ಸಮಸ್ಯೆ ಉಲ್ಬಣವಾಗಿದೆ.
ಅಧಿಕಾರಿಗಳ ಪ್ರಕಾರ, ಮುಂದಿನ ಮೂರು ವಾರಗಳಲ್ಲಿ ಮಳೆ ಬಾರದಿದ್ದರೆ ಗ್ರಾಮೀಣ ಪ್ರದೇಶ ಮಾತ್ರವಲ್ಲದೆ, ನಗರ ಪ್ರದೇಶಗಳಲ್ಲಿಯೂ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಲಿದೆ. ಗ್ರಾಮೀಣ ಭಾಗದ 77 ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೆ ಗುರಿಯಾಗುತ್ತಿವೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಪಟ್ಟಿ ಮಾಡಿದೆ.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತುರ್ತು ನಿಧಿಯನ್ನು ಬಳಸಿಕೊಂಡು ಕೆಲವು ಗ್ರಾಮಗಳಲ್ಲಿ ಬೋರ್ವೆಲ್ಗಳನ್ನು ಮತ್ತಷ್ಟು ಆಳಕ್ಕೆ ಕೊರೆಸಲಾಗುತ್ತಿದೆ. ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, 16 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಇಲ್ಲಿನ ನಿವಾಸಿಗಳು ಕಿಲೋಮೀಟರ್ಗಟ್ಟಲೆ ನಡೆದುಕೊಂಡು ನೀರು ತರಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಕಲಘಟಗಿ ತಾಲೂಕಿನ ದೇವಿಕೊಪ್ಪ, ನೆಲ್ಲಿಹರವಿ, ತಾಂಡಾ, ಯವ್ವಡಾಳ್, ಹುಲ್ಲಿನಕೊಪ್ಪ, ಹುಬ್ಬಳ್ಳಿ ಗ್ರಾಮೀಣದ ವರೂರು, ಅರಳೀಕಟ್ಟಿ, ಚೆಬ್ಬಿ, ಮಂಟೂರು, ನಾಗರಹಳ್ಳಿ, ಕುಸುಗಲ್, ಬಸಾಪುರ, ಚಿಕ್ಕೇನರತಿ, ಕುಂದಗೋಳ ತಾಲೂಕಿನ ಗುಡೇನಕಟ್ಟಿ, ಹೊಸಳ್ಳಿ, ಶಾನವಾಡ ಮತ್ತು ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಎದುರಾಗಿದೆ.
ಈ ಸುದ್ದಿ ಓದಿದ್ದೀರಾ?: ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಜೈಲು ಸೇರಿದ ಬಿಇಒ
ಕಲಘಟಗಿ ತಾಲೂಕಿನಲ್ಲಿ ಶೇ.90ರಷ್ಟು ಜನರು ಕುಡಿಯುವ ನೀರಿಗಾಗಿ ಬೋರ್ವೆಲ್ಗಳನ್ನು ಅವಲಂಬಿಸಿದ್ದಾರೆ. ಇಲ್ಲಿ ಅಂತರ್ಜಲ ತೀವ್ರವಾಗಿ ಕುಸಿದಿದ್ದು, 350 ಅಡಿ ಆಳ ಕೊರೆದರೂ ನೀರು ಸಿಗುತ್ತಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ನವಲಗುಂದ ತಾಲೂಕಿನಲ್ಲಿಯೂ ಕೆರೆಗಳು ಬತ್ತಿ ಹೋಗಿದ್ದು, ಈ ಕೆರೆಗಳಿಗೆ ಕಾಲುವೆಗಳ ಮೂಲಕ ನೀರು ಒದಗಿಸಲಾಗುತ್ತಿದೆ. ಕುಡಿಯುವ ನೀರಿಗೆ ಬಳಸಲು ಇಲಾಖೆಯಲ್ಲಿ ಒಂದು ಕೋಟಿ ರೂ. ಹಣವಿದ್ದು, ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾದರೆ ಕುಡಿಯುವ ನೀರು ಪೂರೈಸಲು ಕಿರು ನೀರು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.