ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜನರು ಖುಷಿಯಿಂದಿದ್ದಾರೆ. ಆದ್ದರಿಂದ ವಿಶ್ವ ವಿಖ್ಯಾತ ನಾಡಹಬ್ಬ ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಡಹಬ್ಬ ದಸರಾ ಕುರಿತಾಗಿ ನಡೆದ ಸಭೆಯಲ್ಲಿ ಮಾತನಾಡಿ, “ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು
ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9-15 ರಿಂದ 9-45ರೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು” ಎಂದರು.
“ಈ ಬಾರಿ ದಸರಾ ಆಚರಣೆಗೆ 40 ಕೋಟಿವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

“ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್
ಆವರಣದಲ್ಲಿ ಆಯೋಜಿಸಬೇಕು” ಎಂದರು.
“ಸ್ತಬ್ಧ ಚಿತ್ರಗಳಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಕುರಿತ ಸ್ತಬ್ಧ ಚಿತ್ರಗಳು, ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧಚಿತ್ರ ಇರಬೇಕು. ದೀಪಾಲಂಕಾರ ದಸರಾ ಆಚರಣೆಯ ಮೆರಗನ್ನು ಹೆಚ್ಚಿಸುತ್ತದೆ. ಹಾಗಾಗಿ ದೀಪಾಲಂಕಾರ 21 ದಿನಗಳ ಕಾಲ ಇರಬೇಕು” ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
“ಯುವಸಂಭ್ರಮ ಹಾಗೂ ಯುವದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರು ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
“ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆ ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು” ಎಂದು ಸಭೆಯಲ್ಲಿ ಸಂಪೂರ್ಣ ಮಾಹಿತಿ ಒದಗಿಸಿದರು.

ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, “ದಸರಾ ಆಚರಣೆಗೆ 19 ಉಪಸಮಿತಿಗಳನ್ನು ರಚಿಸಲಾಗಿದೆ. ಗಜಪಯಣವನ್ನು ಆಗಸ್ಟ್ 21ರಂದು ನಿಗದಿ ಮಾಡಲಾಗಿದ್ದು, ಕರ್ನಾಟಕ ಸಂಭ್ರಮ-50ನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು” ಎಂದರು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮಾತನಾಡಿ, “ವಾರ್ತಾ ಇಲಾಖೆಯ 20 ಬೋರ್ಡ್ಗಳನ್ನು ಡಿಜಿಟಲೀಕರಣ ಮಾಡಿ ಅಲ್ಲಿ ದಸರಾ ಪ್ರಚಾರ ಮಾಡಬೇಕು. ಆಹಾರ ಮೇಳ ಕನಿಷ್ಠ 1 ತಿಂಗಳು ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ನೀಡಬೇಕು. ಕಡಿಮೆ ದರದಲ್ಲಿ ಆಹಾರ ನೀಡಬೇಕು” ಎಂದು ಮನವಿ ಮಾಡಿದರು.
ಅರಣ್ಯ ವಸತಿ ಹಾಗೂ ವಿಹಾರಧಾಮಗಳ ನಿಗಮದ ಅಧ್ಯಕ್ಷ ಹಾಗೂ ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, “ಅರ್ಜುನ ಆನೆ ವೀರಮರಣ ಹೊಂದಿದ್ದು, ಅದರ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಬೇಕು” ಎಂದು ಕೋರಿಕೆ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ, ಸಾಮಾಜಿಕ ಅಭಿವೃದ್ಧಿ: ಸಚಿವ ಎಚ್ ಕೆ ಪಾಟೀಲ
ಸಭೆಯಲ್ಲಿ ಶಾಸಕರುಗಳಾದ ಜಿ ಟಿ ದೇವೇಗೌಡ, ಕೆ ಹರೀಶ್ ಗೌಡ, ರಮೇಶ್ ಬಂಡಿ ಸಿದ್ದೇಗೌಡ, ಪುಟ್ಟರಂಗ ಶೆಟ್ಟಿ, ಶ್ರೀವತ್ಸ, ಡಿ ರವಿಶಂಕರ್, ಎಚ್ ಎಂ ಗಣೇಶ್ ಪ್ರಸಾದ್, ಎ ಆರ್ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್, ಡಿ ತಿಮ್ಮಯ್ಯ, ಕೆ ವಿವೇಕಾನಂದ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.