ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ಭದ್ರಪಡಿಸಲಾಗಿದೆ.
ಮೇ 10ರ ಸಂಜೆ ಮತದಾನ ಮುಗಿದ ಬಳಿಕ, ಇವಿಎಂಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರಗಳನ್ನು ಸೀಲ್ ಮಾಡಿ ಭಾರೀ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆ ಏಜೆಂಟರ ಸಮ್ಮುಖದಲ್ಲಿ ಮತಗಟ್ಟೆಗಳಿಂದ ಮತ ಎಣಿಕೆ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಜನರಿಗೆ ಮತದಾನ ಎಂದರೆ ನಿರ್ಲಕ್ಷ್ಯವೇಕೆ?
ಉಪ ಪೊಲೀಸ್ ಆಯುಕ್ತರು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಕೇಂದ್ರ ಅರೆಸೈನಿಕ ಪಡೆಗಳು, ನಗರ ಸಶಸ್ತ್ರ ಮೀಸಲು ಪಡೆ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ಸಿಬ್ಬಂದಿಯ ತಂಡವನ್ನು ದಿನದ 24 ಗಂಟೆಯೂ ಭದ್ರತಾ ಕೊಠಡಿಗಳ ಭದ್ರತೆಗಾಗಿ ನಿಯೋಜಿಸಲಾಗಿದೆ.
ಶನಿವಾರ(ಮೇ.13) ಬೆಳಿಗ್ಗೆ 7 ಗಂಟೆಗೆ ಕಾಲೇಜು ಆವರಣದಲ್ಲಿ ಮತ ಎಣಿಕೆ ಪ್ರಾರಂಭವಾಗಲಿದೆ. ಭದ್ರತಾ ಕೊಠಡಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಾಲೇಜಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.