ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.
ಪ್ರಚಾರಕ್ಕಾಗಿ ಹಾಗೂ ಬಿಜೆಪಿ ಕೇಂದ್ರ ನಾಯಕರನ್ನು ಓಲೈಸುವ ಉದ್ದೇಶದಿಂದ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ಭೇದಭಾವ ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ದಸಂಸ ಮುಖಂಡರು ಆರೋಪಿಸಿದರು.
ಟಿ ನರಸೀಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ರಾಜಕೀಯ ಒತ್ತಡ ತರುವ ಪ್ರಯತ್ನ ಸಲ್ಲದು ಎಂದರು.
ತಿರುಮಕೂಡಲು ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್ ಅವರು ಗಣೇಶೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಸೂಚನೆ ನೀಡಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳ ಸಮೀಪ ಪ್ರಚೋದನಕಾರಿ ವರ್ತನೆ, ಘೋಷಣೆ, ಪಟಾಕಿ ಸಿಡಿಸುವುದು ಅಥವಾ ಇತರರಿಗೆ ಅಸಮಾಧಾನ ಉಂಟುಮಾಡುವ ರೀತಿಯಲ್ಲಿ ನಡೆದುಕೊಳ್ಳದಂತೆ ತಿಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವ ಕ್ರಮವಾಗಿದೆ ಎಂದು ದಸಂಸ ಮುಖಂಡರು ಹೇಳಿದರು.
ಆದರೆ, ಈ ವಿಚಾರವನ್ನು ತಪ್ಪಾಗಿ ಅರ್ಥೈಸಿಕೊಂಡು ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಸ್ಥಳೀಯವಾಗಿ ಕಾನೂನು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಧನಂಜಯ್ ಅವರ ವಿರುದ್ಧ ರಾಜಕೀಯವಾಗಿ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳಿದ್ದು, ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.
ಪ್ರತಾಪ್ ಸಿಂಹ ಅವರು ಈ ಹಿಂದೆ ಕೂಡ ಕೆಲವು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದ ಘಟನೆಗಳನ್ನು ಉಲ್ಲೇಖಿಸಿದ ದಸಂಸ ಮುಖಂಡರು, ಇಂತಹ ಬೆಳವಣಿಗೆಗಳು ಸಮಾಜದಲ್ಲಿ ಅನಗತ್ಯ ಉದ್ವಿಗ್ನತೆ ಸೃಷ್ಟಿಸಬಹುದು ಎಂದು ಹೇಳಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂತಹ ರಾಜಕೀಯ ಬೆಳವಣಿಗೆಗಳಲ್ಲಿ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಸಂಸ ಮುಖಂಡರು ಹೇಳಿದರು.
ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಧನಂಜಯ್ ಅವರಿಗೆ ಯಾವುದೇ ರೀತಿಯ ರಾಜಕೀಯ ಒತ್ತಡ ಅಥವಾ ಅಡ್ಡಿ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಶ್ರೀಕಂಠಸ್ವಾಮಿ, ರಾಜಶೇಖರ ಕೋಟೆ, ಪುಟ್ಟಮಾದಯ್ಯ, ಅಲಗೂಡು ಶಿವಣ್ಣ, ಲಿಂಗಯ್ಯ, ಎಂ. ರಾಜಶೇಖರ್, ಕಾಂತರಾಜ್, ಎಸ್.ಆರ್.ಎಸ್. ಮಂಜು ಸೇರಿದಂತೆ ಇತರರು ಇದ್ದರು.




