ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ನಗರದ ಮಣಿಪಾಲ ಆಸ್ಪತ್ರೆ ವೃತ್ತದಲ್ಲಿ ಜಮಾಯಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ರಸ್ತೆ ತಡೆ ನಡೆಸಿ, ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿರುವ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಇದ್ದರೂ ಅದು ಈಡೇರದಿರುವುದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಒಂದು ಕಾಲದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಪ್ರಭಾವಿ ಸಚಿವರನ್ನು ಹೊಂದಿದ್ದ ಮೈಸೂರು ಜಿಲ್ಲೆಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಹೊಸ ಪ್ರತಿನಿಧಿತ್ವ ಸಿಗದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಬೇಸರ ಮೂಡಿಸಿದೆ. ಈ ಹಿಂದೆ ಜಿಲ್ಲೆಯಿಂದ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಸಚಿವರಾಗಿದ್ದರು. ಪ್ರಸ್ತುತ ಡಾ. ಯತೀಂದ್ರ ಸಿದ್ದರಾಮಯ್ಯ ಮಾತ್ರ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸಂಪುಟದಲ್ಲಿದ್ದು, ತನ್ವಿರ್ ಸೇಠ್ ಅವರಿಗೆ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಇದೇ ವೇಳೆ, ಮೈಸೂರಿನ ಉದಯಗಿರಿ ನಿವಾಸದ ಎದುರು ಜಮಾಯಿಸಿದ್ದ ಅಭಿಮಾನಿಗಳ ಪೈಕಿ ತಬ್ರೇಜ್ ಸೇಠ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ತಕ್ಷಣವೇ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ತನ್ವಿರ್ ಸೇಠ್, ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ಭರವಸೆ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಚಿವ ಸ್ಥಾನ ಕೈತಪ್ಪಲು ರಾಜ್ಯ ಮಟ್ಟದ ಕೆಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ ಅವರು, ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಡೆ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.
ಈ ವಿಶೇಷ ಸುದ್ದಿ ಓದಿದ್ದೀರಾ?SIR: ಕೊಡಗಿನ ಆದಿವಾಸಿಗಳ ಅಸ್ತಿತ್ವದ ಪ್ರಶ್ನೆಯ ಮುಂದೆ ಆಡಳಿತದ ಅಂಕಿ-ಅಂಶಗಳು ಸಾಕೇ?
ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಗೆ ಮತ್ತೊಮ್ಮೆ ನಿರೀಕ್ಷಿತ ಸ್ಥಾನಮಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕತ್ವ ಈ ಬೆಳವಣಿಗೆಗೆ ಹೇಗೆ ಸ್ಪಂದಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ.




