ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಮತ್ತು ಎನ್ಎಸ್ಎಸ್(NSS) ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಉದ್ಯಮಿ ಲಿಂಗರಾಜು ಎನ್. ಬೆಳ್ತೂರು, “ವಿದ್ಯಾರ್ಥಿ ಜೀವನದಲ್ಲಿ ಕೇವಲ ಪಠ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಾನಪದ ಕಲಾವಿದ ಡಾ. ಸಿ. ಸುಂದರೇಶ್ ಮಾತನಾಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಥಳೀಯ ಜಾನಪದ ಕಲೆಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಹೇಗೆ ವೇದಿಕೆ ಸಿಗುತ್ತದೆ ಎಂಬುದನ್ನು ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ತಿಮ್ಮಯ್ಯ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ವಿಶ್ವವಿದ್ಯಾನಿಲಯ ಸಂಜೆ ಕಾಲೇಜಿನ ವೈಶಿಷ್ಟ್ಯಗಳು, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ, ಆಸಕ್ತಿ ಹಾಗೂ ಅವರ ಸಂಘಟನಾ ಸಾಮರ್ಥ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ವೇದಿಕೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಸಮಿತಿಯ ಸಂಚಾಲಕರಾದ ಡಾ. ಶಿವಶಂಕರ್ ಬಿ. ಹಾಗೂ NSS ಸಂಯೋಜಕರಾದ ಡಾ. ನಿಂಗರಾಜು ಉಪಸ್ಥಿತರಿದ್ದರು.
ಈ ಸುದ್ದಿ ಓದಿದ್ದೀರಾ? ಕೋಲಾರ | ಥಲ್ ಸೈನಿಕ್ ಶಿಬಿರದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ, ಜಿಲ್ಲೆಯ ಐವರು ಎನ್ಸಿಸಿ ಕೆಡೆಟ್ಗಳ ಸಾಧನೆ
ಡಾ. ಎಚ್ ಬಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು. ಡಾ. ಲಾವಣ್ಯ ಅವರು ಎಲ್ಲ ಅತಿಥಿಗಳನ್ನು ಸ್ವಾಗತಿಸಿದರು. ಡಾ. ನಿಂಗರಾಜು ಅವರು ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿದರು ಹಾಗೂ ಡಾ. ಪಿ ರವಿ ಅವರು ಅತಿಥಿಗಳು ಹಾಗೂ ಸಭಿಕರೆಲ್ಲರಿಗೂ ವಂದನೆಗಳನ್ನು ಅರ್ಪಿಸಿದರು.




