ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ಆಕ್ಷೇಪಣೆಗಳನ್ನು ಆಹ್ವಾನಿಸಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಕರಡು ಮೀಸಲಾತಿ ಅಧಿಸೂಚನೆಯನ್ನು ಅಂತಿಮಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್ಗೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು 2021ರಲ್ಲಿ ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಲೇವಾರಿ ಮಾಡಿತು.
“ಒಂದು ವಾರದಲ್ಲಿ ಹೊರಡಿಸಲಾಗುವ ಕರಡು ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸ್ವೀಕರಿಸುವ ಪ್ರಕ್ರಿಯೆ ಪೂರ್ಣಗೊಂಡ ಎರಡು ವಾರಗಳ ನಂತರ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಯನ್ನು ಅಂತಿಮಗೊಳಿಸಲಾಗುವುದು” ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ನ್ಯಾಯಾಲಯಕ್ಕೆ ತಿಳಿಸಿದರು.
ಮಂಗಳವಾರ ಸಂಜೆಯೊಳಗೆ ತಮ್ಮ ಭರವಸೆಯನ್ನು ನ್ಯಾಯಾಲಯದ ಮುಂದೆ ಇಡುವಂತೆ ನಿರ್ದೇಶಿಸಿದ ನ್ಯಾಯಾಲಯವು ಅರ್ಜಿಯನ್ನು ವಿಲೇವಾರಿ ಮಾಡಿತು.
ಎಸ್ಇಸಿಯನ್ನು ಪ್ರತಿನಿಧಿಸುವ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರ ಸಲ್ಲಿಕೆಗಳನ್ನು ಆಲಿಸಿದ ನ್ಯಾಯಾಲಯ, “ಅಡ್ವಕೇಟ್ ಜನರಲ್ ನೀಡಿದ ಯಾವುದೇ ಭರವಸೆಯ ಉಲ್ಲಂಘನೆಯಾಗಿದ್ದರೆ ಸೂಕ್ತ ಕ್ರಮಗಳನ್ನು ಪ್ರಾರಂಭಿಸಲು ಅರ್ಜಿದಾರರು ನ್ಯಾಯಾಲಯವನ್ನು ಸಂಪರ್ಕಿಸಬಹುದು” ಎಂದು ಹೇಳಿದರು.
“ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2021ಅನ್ನು ಲೆಕ್ಕಿಸದೆ ಸಂವಿಧಾನದ 243-ಇ ವಿಧಿಯಡಿ ಆದೇಶವನ್ನು ಈ ಪ್ರಕ್ರಿಯೆಯು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಗ್ರಾಮೀಣ ಕರ್ನಾಟಕದ ವಿದ್ಯಾರ್ಥಿಗಳು ಗಣಿತದಲ್ಲಿ ಹಿಂದುಳಿದಿದ್ದಾರೆ: ಸಮೀಕ್ಷೆ
2021 ಮಾರ್ಚ್ 30ರ ಅಂತಿಮ ಡಿಲಿಮಿಟೇಶನ್ ಅಧಿಸೂಚನೆ ಮತ್ತು ಜುಲೈ 1 ರ ಕರಡು ಮೀಸಲಾತಿ ಅಧಿಸೂಚನೆಗಳಿಗೆ ಅನುಸಾರವಾಗಿ ಎಲ್ಲ ತಾ.ಪಂ ಮತ್ತು ಜಿ.ಪಂ.ಗಳಿಗೆ ಚುನಾವಣೆಗಳನ್ನು ನಡೆಸಲು ಎಸ್ಇಸಿ ಈಗಾಗಲೇ ಪ್ರಾರಂಭಿಸಿದ ಪ್ರಕ್ರಿಯೆ ಮತ್ತು ಕ್ರಮಗಳನ್ನು ಮುಂದುವರಿಸಲು ಹಾಗೂ ತ್ವರಿತವಾಗಿ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಸ್ಇಸಿ 2021 ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.