ನೂತನ ಸಚಿವರಿಗೆ ಖಾತೆ ಹಂಚಿಕೆ ಈಗಾಗಲೇ ಫೈನಲ್ ಆಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಂತರ ಮಾಧ್ಯಮಗಳಲ್ಲಿ ಬಿತ್ತರವಾದ ಪಟ್ಟಿಯೇ ನಿಜವಿದ್ದು, ರಾಜ್ಯಪಾಲರಿಂದ ಅಂತಿಮ ಮುದ್ರೆ ಅಷ್ಟೇ ಬಾಕಿ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಖಾತೆ ಹಂಚಿಕೆಯಾದ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗೆ ಹರಿದಾಡುತ್ತಿದ್ದ ಪಟ್ಟಿಯನ್ನು ನಕಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಈ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಆದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಿನ್ನವಾಗಿ ಪ್ರತಿಕ್ರಿಯಿಸಿದ್ದು, “ಇನ್ನೂ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಿಲ್ಲ” ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಅದು ನಕಲಿ ಪಟ್ಟಿ ಎಂದು ಸ್ಪಷ್ಟನೆ ನೀಡಿತ್ತು.