- ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್
- ಮೀಸಲಾತಿ ಕಲ್ಪಿಸಲು ಇದ್ದಂತಹ ಅಡ್ಡಿ ನಿವಾರಣೆ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ, 2ಸಿ ಮತ್ತು 2ಡಿ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ (ಮಾರ್ಚ್ 23) ತೆರವುಗೊಳಿಸಿದೆ.
ಮಧ್ಯಂತರ ಆದೇಶ ತೆರವು ಮಾಡಿದ ಹೈಕೋರ್ಟ್, “ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಬೇಕು. ಹೈಕೋರ್ಟ್ ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು” ಎಂದು ಸೂಚನೆ ನೀಡಿದೆ. ಇದರಿಂದಾಗಿ 2023ರ ವಿಧಾನಸಭಾ ಚುನವಾಣೆಗೆ ಸಿದ್ದತೆ ನಡೆಸುತ್ತಿದ್ದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಡಿ.ಜಿ ರಾಘವೇಂದ್ರ ಎಂಬುವರು, “ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು ಹಾಗೂ ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಪ್ರೋತ್ಸಾಹಿಸದಂತೆ ತಡೆ ನೀಡಬೇಕು” ಎಂದು ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು. ಇದರಿಂದ ಪ್ರವರ್ಗ 2ಎ, 2ಸಿ ಅಥವಾ 2ಡಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಕೈಗೊಂಡಿದ್ದ ನಿರ್ಣಯದ ಮುಂದಿನ ಪ್ರಕ್ರಿಯೆಗಳಿಗೆ ತಾತ್ಕಾಲಿಕ ತಡೆ ಬಿದ್ದಿತ್ತು. ಆದರೆ, ಕೇಂದ್ರ ಸರ್ಕಾರದ ಸಾಲಿಸಿಟರ್ 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ.
ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಹೊಸ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರವು ಪಂಚಮಸಾಲಿ ಸಮುದಾಯಕ್ಕೆ 2ಎ, 2ಸಿ ಅಥವಾ 2ಡಿ ಮೀಸಲಾತಿ ನೀಡಲು ಅಡ್ಡಿ ಇಲ್ಲದ್ದಂತಾಗಿದೆ. ಸರ್ಕಾರವು ಇಂದು (ಶುಕ್ರವಾರ) ಸಂಪುಟ ಸಭೆ ಕರೆದಿದ್ದು, ಇದರ ಬಗ್ಗೆ ಚರ್ಚಿಸುವ ಸಾದ್ಯತೆ ಇದೆ ಎನ್ನಲಾಗಿದೆ.