ಮೂಲ ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ ಮಾಡುತ್ತಿರುವ ಮಸ್ಕಿ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಟಿಪ್ಪುಸುಲ್ತಾನ್ ಉದ್ಯಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಮೂಲ ಭೋವಿ ಸಮಾಜ ಹಿಂದಿನಿಂದಲೂ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆಯುತ್ತಿದ್ದಾರೆ. ಆದರೆ, ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯರಗೋಳ ಉದ್ದೇಶಪೂರ್ವಕವಾಗಿ ನಮ್ಮ ಜಾತಿಯವರಿಗೆ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಲಿಂಗಸುಗೂರು ಸಹಾಯಕ ಆಯುಕ್ತರು ಕೂಡ ಈಗಾಗಲೇ ಜಾತಿ ಪ್ರಮಾಣ ನೀಡುವಂತೆ ಆದೇಶ ಮಾಡಿದ್ದಾರೆ. ಆದರೂ ಅವರ ಆದೇಶ ಧಿಕ್ಕರಿಸಿ ತಹಶೀಲ್ದಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಷ್ಟೇ ಅಲ್ಲದೇ, ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿಗಳ ಸುತ್ತೋಲೆ ಕೂಡ ಇದೆ. ಅದರಲ್ಲಿ ಮೂಲ ಭೋವಿಗಳು (ಬೆಸ್ತರಲ್ಲದ, ವಡ್ಡರಲ್ಲದ) ಪರಿಶಿಷ್ಟ ಜಾತಿ ಪ್ರಮಾಣ ಪತ್ರ, ಸಿಂಧುತ್ವ ನೀಡಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಮೇಲಧಿಕಾರಿಗಳ ಆದೇಶಗಳನ್ನು ಉಲ್ಲಂಘಿಸಿರುವ ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯರಗೋಳರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಕೂಡಲೇ ವಿತರಣೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ, ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಎಚ್.ಭೋವಿ, ಕಾರ್ಯಾಧ್ಯಕ್ಷ ರಾಮಣ್ಣ ಎಚ್. ಭೋವಿ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಿ. ಕಂದಗಲ್ಲ, ಶರಣಬಸವ ಆನೆಹೋಸುರು ಸೇರಿದಂತೆ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
