ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳಷ್ಟು ವಿಳಂಬವಾಗಿದೆ. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆೆಗಳನ್ನು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಚುನಾವಣೆಗೆ ತಾಂತ್ರಿಕ ತೊಡಕುಗಳು ಎದುರಾಗಿ ವಿಳಂಬವಾಗಿತ್ತು. ಮಾರ್ಚ್ ತಿಂಗಳ ಬಜೆಟ್ ನಂತರ ಸ್ಥಳೀಯ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗುವುದು” ಎಂದು ತಿಳಿಸಿದರು.
“ಮಹಾತ್ಮ ಗಾಂಧೀಜಿಯವರ ಆದರ್ಶ ಮತ್ತು ಹಾದಿಯಲ್ಲಿಯೇ ಕಾಂಗ್ರೆಸ್ ಪಕ್ಷ 100 ವರ್ಷಗಳಿಂದಲೂ ನಡೆದುಬಂದಿದೆ. ಮುಂದೆಯೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿಯೇ ಪಕ್ಷ ನಡೆಯುತ್ತದೆ. ಇಡೀ ದೇಶಕ್ಕೆ ಸತ್ಯ ಮತ್ತು ಅಂಹಿಸೆಯ ಸಂದೇಶವನ್ನು ಸಾರಿದ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ದಾಂತಗಳಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಅವರ ತತ್ವಗಳ ತಳಹದಿಯಲ್ಲಿ ದೇಶವನ್ನು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕಾಗಿದೆ” ಎಂದು ಕರೆ ನೀಡಿದರು.
“ಬೀದರ್ ದರೋಡೆ ಪ್ರಕರಣದ ಕುರಿತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಕರಣದ ಬಗ್ಗೆ ಗೃಹಸಚಿವ ಡಾ. ಪರಮೇಶ್ವರ್ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಅವರು ಕಳಂಕರಹಿತ ನಾಯಕ. ಈ ಹುದ್ದೆಯನ್ನು ನಿಭಾಯಿಸುವ ಶಕ್ತಿ ಅವರಿಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲವಾಗಿದೆ : ಶಾಸಕ ಬಿ ಆರ್ ಪಾಟೀಲ್
“ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆಯನ್ನು ಕೈಗೊಂಬೆಯಾಗಿಸಿಕೊಂಡಿದೆ. ವಿರೋಧ ಪಕ್ಷದವರ ಮೇಲೆ ರೈಡ್ ಮಾಡಿಸಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಇದೊಂದು ಕೆಟ್ಟ ರಾಜಕಾರಣ” ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಸಚಿವ ಎನ್ ಎಸ್ ಬೋಸರಾಜ, ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯ ಎ ವಸಂತಕುಮಾರ, ಜಿಲ್ಲಾಧ್ಯಕ್ಷ ಬಸವರಾಜ ಪಾಟಿಲ್ ಇಟಗಿ, ಕಾಂಗ್ರೆಸ್ ಮುಖಂಡ ರಜಾಕ್ ಉಸ್ತಾದ್, ಕೆ ಶಾಂತಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಡಾ. ನಾಗವೇಣಿ ಎಸ್ ಪಾಟೀಲ್ ಸೇರಿದಂತೆ ಇತರರು ಇದ್ದರು.
