ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು.
ಬಿಜೆಪಿ ಶಾಸಕ ಯತ್ನಾಳ್, ಮುಸ್ಲಿಂ ಸಮುದಾಯದ ವಿರುದ್ಧ ಅನೇಕ ಬಾರಿ ಅವಹೇಳನಕಾರಿ ಹೇಳಿಕೆ ನೀಡಿ, ಪ್ರವಾದಿ ಅವರನ್ನು ನಿಂದಿಸುತ್ತಿದ್ದಾರೆ. ನಾವು ಗೌರವಿಸುವ ಪ್ರವಾದಿ ಅವರ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿ ಸಮುದಾಯದ ಭಾವನೆಗೆ ಧಕ್ಕೆ ತಂದಿದ್ದಾರೆ. ಯತ್ನಾಳ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಯತ್ನಾಳ ಅವರು ಒಂದು ಸಮುದಾಯದ ವಿರುದ್ಧ ಪದೇ ಪದೇ ನಾಲಿಗೆ ಹರಿಬಿಟ್ಟು ಕೋಮು ದ್ವೇಷಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಏಪ್ರಿಲ್ 13 ರಂದು ಲಿಂಗಸುಗೂರು ತಾಲೂಕಿನಲ್ಲಿ ಬಜರಂಗದಳ ಹಾಗೂ ಶ್ರೀರಾಮಸೇನೆ ಆಯೋಜಿಸಿರುವ ಶ್ರೀ ರಾಮನವಮಿಗೆ ಆಗಮಿಸುತ್ತಿರುವ ಶಾಸಕ ಯತ್ನಾಳ ಹಾಗೂ ಪ್ರಮೋದ್ ಮುತಾಲಿಕ್ ಅವರ ಅನುಮತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಾಗ ಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಸಮಿತಿ ಸಂವಿಧಾನ ಬಾಹಿರ: ಮಹೇಂದ್ರ ಕುಮಾರ್
ಶಾಂತಿ ಸೌಹಾರ್ದತೆಗೆ ಹೆಸರುವಾಗಿರುವ ಲಿಂಗಸುಗೂರು ತಾಲೂಕಿನಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿ ಕೋಮುಗಲಭೆ ಏನಾದರೂ ಸಂಭವಿಸಿದಲ್ಲಿ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದು ಪಕ್ಷ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡ ತೌಸೀಫ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಶೇಕ್ ದಾವೂದ್ ಉಪಸ್ಥಿತರಿದ್ದರು.
