ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಅವರನ್ನು ಭಾರೀ ಅಂತರದಿಂದ ಜಯಸಾಧಿಸಲು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದಿನಿಂದಲೇ ಕೆಲಸ ಪ್ರಾರಂಭಿಸಿ ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಕರೆ ನೀಡಿದರು.
ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಅವರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ವೇಳೆ ಮಾತನಾಡಿದರು.
“ಜಿಲ್ಲಾಧಿಕಾರಿಯಾಗಿ ಸರ್ಕಾರದ ಅನೇಕ ಹುದ್ದೆಗಳನ್ನು ನಿರ್ವಹಿಸಿರುವ ಜಿ ಕುಮಾರ ನಾಯಕ ಪ್ರಾಮಾಣಿಕ, ಜನರ ನೋವಿಗೆ ಸ್ಪಂದಿಸುವ ವ್ಯಕ್ತಿತ್ವ ಹೊಂದಿದ್ದಾರೆ. ಅವರ ಸೇವಾ ಅನುಭವ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ” ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ಸಿಂಗ್ ಮಾತನಾಡಿ, “ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ವಾಧಿಕಾರಿ ಸರ್ಕಾರ ಅಂತ್ಯಗೊಳಿಸಲು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಉತ್ತರಿಸಬೇಕಾಗಿದೆ. ಹಿರಿಯ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಜಿ ಕುಮಾರ ನಾಯಕ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಲು ಜನರು ಅಶೀರ್ವದಿಸಬೇಕು” ಎಂದು ಕೋರಿದರು.
ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಮಾತನಾಡಿ, “ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಿದ್ದು, ಚುನಾವಣೆಯಲ್ಲಿ ಮತ ನೀಡುವ ಮೂಲಕ ಕ್ಷೇತ್ರದ ಜನರ ಅಭಿವೃದ್ಧಿಗೆ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ರಾಯಚೂರು ನಗರದ ಕರ್ನಾಟಕ ಸಂಘದಿಂದ ಆರಂಭವಾದ ಮೆರವಣಿಗೆ ಶೆಟ್ಟಿಭಾವಿ ವೃತ್ತ, ಸರಾಫ್ ಬಜಾರ್, ತೀನ್ಖಂದಿಲ್, ಬಟ್ಟೆ ಬಜಾರ್, ಮಹಾವೀರ ವೃತ್ತ, ಗಾಂಧಿ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ತೆರೆದ ವಾಹನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ ಮತ್ತು ಮುಖಂಡರು ಚುನಾವಣೆಯಲ್ಲಿ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ ಹಲವು ತಾಲೂಕಗಳಿಂದ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಬೆಂಬಲಿಗರು ಅಭ್ಯರ್ಥಿ ಪರ ಜಯಘೋಷ ಮೊಳಗಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿ ಸೋಲಿಸಿ, ಕಾಂಗ್ರೆಸ್ ಗೆಲ್ಲಿಸಿ: ಸಾಹಿತಿ ದೇವನೂರು ಮಹಾದೇವ ಕರೆ
ಮೆರವಣಿಗೆಯಲ್ಲಿ ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರು, ಶಾಸಕರಾದ ಬಸನಗೌಡ ದದ್ದಲ, ಹಂಪಯ್ಯ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಎ ವಸಂತಕುಮಾರ, ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಭಯ್ಯಾಪೂರು, ಸುರಪುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಕೆಪಿಸಿಸಿ ಕಾರ್ಯದರ್ಶಿ ಕೆ ಶಾಂತಪ್ಪ, ರಾಮಣ್ಣ ಇರಬಗೇರಾ, ಯುವ ಕಾಂಗ್ರೆಸ್ ಮುಖಂಡ ರವಿ ಬೋಸರಾಜು, ಕಾಂಗ್ರೆಸ್ ಮುಖಂಡ ಮಹ್ಮದ್ ಶಾಲಂ, ಸ್ಟಾರ್ ಪ್ರಚಾರಕ ಅಂಬಣ್ಣ ಅರೋಲಿ, ಶೀಲಾ ಕುಮಾರ ನಾಯಕ ಸೇರಿದಂತೆ ಸಾವಿರಾರು ಕಾರ್ಯಕರ್ತರು ಇದ್ದರು.
