ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ವಿಚಾರಣೆ ನಡೆಸುವಂತೆ ಆಗ್ರಹಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದುಡಿಯುವ ಮಹಿಳೆಯರ ಹೋರಾಟ ಸಮನ್ವಯ ಸಮಿತಿ(ಸಿಐಟಿಯು ಸಂಯೋಜಿತ)ಯಿಂದ ಪ್ರತಿಭಟನೆ ನಡೆಸಲಾಯಿತು.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯಗಳಲ್ಲಿ ತ್ವರಿತ ವಿಚಾರಣೆ ನಡೆಸಬೇಕು. ಹೆಚ್ಚಿನ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಹಾಗೂ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ಒತ್ತಾಯಿಸಲಾಯಿತು.
ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.
ದೇಶದ ಹಲವೆಡೆ ಮಹಿಳೆಯರ, ಮಕ್ಕಳ, ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ನೀತಿಯಿಂದ ಭಯಭೀತರಾಗಿದ್ದಾರೆ. ಮಹಿಳೆಯರಿಗೆ ಸುರಕ್ಷತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ, ಹತ್ಯೆ, ಮಹಾರಾಷ್ಟ್ರದ ಬದ್ಲಾಪುರ ಠಾಣೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ, ಉತ್ತರಪ್ರದೇಶ ನರ್ಸ್ ಮೇಲೆ ಅತ್ಯಾಚಾರ, ಕೊಲೆ, ಉತ್ತರಾಖಂಡ್ ನ ಡೆಹ್ರಾಡೂನ್ ಬಸ್ನಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ಹೀಗೆ ದೇಶದ ನಾನಾ ಭಾಗಗಳಲ್ಲಿ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ ಎಂದು ದೂರಿದರು.
ಆರ್ ಜಿ ಕರ್ ಪ್ರಕರಣದಲ್ಲಿ ಕೊಲ್ಕತ್ತಾದ ವೈದ್ಯೆಗೆ ನ್ಯಾಯ ದೊರೆಯಲು ನಿಷ್ಪಕ್ಷಪಾತ, ತ್ವರಿತ ವಿಚಾರಣೆ ನಡೆಸಬೇಕು. ಪ್ರಕರಣದ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಿಬೇಕು. ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರ ಮಾನಸಿಕ ಆರೋಗ್ಯಕ್ಕೆ ಕಾಳಜಿ ವಹಿಸಬೇಕು. ಪುನರ್ವಸತಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಬೇಕು. ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಸುರಕ್ಷತೆಯ ಜತೆಗೆ ಕುಡಿಯುವ ನೀರು, ಕಾವಲು ವ್ಯವಸ್ಥೆ, ರಾತ್ರಿ ಸುರಕ್ಷತೆಗೆ ಸಾರಿಗೆ ವ್ಯವಸ್ಥೆ ಒದಗಿಸಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ರಾಮನಗರ | ನಿಯಮ ಉಲ್ಲಂಘಿಸಿ ರಾಯಸಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಕ್ರಮಕ್ಕೆ ಆಗ್ರಹ
ವೈದ್ಯರ, ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯ ಸುರಕ್ಷತೆ ಖಾತರಿಪಡಿಸಬೇಕು. ಮಹಿಳಾ ಸಬಲೀಕರಣಕ್ಕೆ ರೂಪಿಸಲಾದ ಕಾರ್ಯಕ್ರಮ, ಕಾನೂನುಗಳನ್ನು ಪರಿಣಾಮಕಾರಿ ಜಾರಿಗೊಳಿಸಬೇಕು ಹಾಗೂ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಎಚ್ ಪದ್ಮಾ, ಪ್ರಧಾನ ಕಾರ್ಯದರ್ಶಿ ಡಿ.ಎಸ್ ಶರಣಬಸವ, ಕೆ.ಜಿ ವೀರೇಶ, ಸರೋಜಾ, ವಿರುಪಮ್ಮ ಪಾಲ್ಗೊಂಡಿದ್ದರು.
