ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಮಂಜೂರು ಮಾಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಹಾಗೂ ಬೀದರ್ ಜಿಲ್ಲಾ ಜನಪರ ಸಂಘಟನೆಗಳು ಆಗ್ರಹಿಸಿವೆ.
ಈ ಸಂಬಂಧ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಶನಿವಾರ ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಪ್ರಮುಖರು ಮಾತನಾಡಿ, “ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಕಳೆದ 1,500 ದಿನಗಳಿಂದ ನಿರಂತರವಾಗಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಅದಕ್ಕೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಏಮ್ಸ್ ಗಾಗಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆಗುತ್ತಿರುವ ಪ್ರಾದೇಶಿಕ ಅನ್ಯಾಯದ ವಿರುದ್ಧವಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಗೆ ಮಂಜೂರು ಆಗಬೇಕಿದ್ದ ಐಐಟಿ ರಾಜಕೀಯ ಒತ್ತಡದಿಂದ ಧಾರವಾಡಕ್ಕೆ ಸ್ಥಳಾಂತರಗೊಂಡಿದ್ದು, ಇದು ಜಿಲ್ಲೆಯ ಜನರಿಗೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಯಾವುದೇ ಒತ್ತಡಗಳಿಗೆ ಮಣಿಯದೆ ಕೇಂದ್ರ ಸರ್ಕಾರ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು” ಎಂದು ಆಗ್ರಹಿಸಿದರು.
ರಾಯಚೂರು ಜಿಲ್ಲೆ ಏಮ್ಸ್ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಹೊಂದಿದ್ದು, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಸಂಪರ್ಕ, ವಿಮಾನ ನಿಲ್ದಾಣ ಸಮೀಪತೆ, ಸಾಕಷ್ಟು ಸರ್ಕಾರಿ ಭೂಮಿ, ನೀರಿನ ಲಭ್ಯತೆ ಇದೆ. ಜಿಲ್ಲೆಯಲ್ಲಿ ಎರಡು ವಿಶ್ವವಿದ್ಯಾಲಯಗಳು, ವೈದ್ಯಕೀಯ ಕಾಲೇಜು, ದಂತ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶವು ಆರೋಗ್ಯ ಕ್ಷೇತ್ರದಲ್ಲಿ ಜಿಲ್ಲೆ ತೀವ್ರ ಹಿಂದುಳಿದಿದ್ದು, ಗುಣಮಟ್ಟದ ತೃತೀಯ ಹಂತದ ವೈದ್ಯಕೀಯ ಸೇವೆಗಳ ಕೊರತೆಯಿಂದ ಜನರು ಚಿಕಿತ್ಸೆಗಾಗಿ ದೂರದ ನಗರಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಪೌಷ್ಟಿಕತೆ, ಶಿಶು ಮರಣ ಪ್ರಮಾಣ ಹಾಗೂ ತಾಯಂದಿರ ಮರಣ ಪ್ರಮಾಣವೂ ಕಳವಳಕಾರಿ ಮಟ್ಟದಲ್ಲಿದೆ. ಸಂವಿಧಾನದ ಕಲಂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇಂದ್ರ ನ್ಯಾಯ ಒದಗಿಸಬೇಕಿದ್ದು, ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಲಾಗಿದೆ.
ಇದನ್ನೂ ಓದಿ : ಬೀದರ್ | 12 ಸುಮೋಟೋ ಪ್ರಕರಣ ದಾಖಲು: ಉಪಲೋಕಾಯುಕ್ತ ಬಿ.ವೀರಪ್ಪ ಎಚ್ಚರಿಕೆ
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಜಿಲ್ಲಾ ಸಂಯೋಜಕ ವಿನಯ ಕುಮಾರ ಮಾಳಗೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯ ಸಂಯೋಜಕ ಅಂಬೇಡ್ಕರ್ ಗೋರನಾಳಕರ್, ಕಾರಂಜ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ್ ಹೊಚಕನಳ್ಳಿ, ಜಾಗೃತ ಕರ್ನಾಟಕ ಸದಸ್ಯ ಬಾಲಾಜಿ ಕುಂಬಾರ, ಟೀಮ್ ಯುವಾ ಸಂಸ್ಥೆ ಅಧ್ಯಕ್ಷ ತಥಾಗತ ಸೂರ್ಯವಂಶಿ, ಪ್ರಗತಿ ಪರ ದಲಿತ ಯುವಾ ಪಡೆ ಸಂಸ್ಥಾಪಕ ಶ್ರೀಧರ್ ಸೋಮನೋರ್, ರೀಶೈನ್ ಸಂಸ್ಥೆ ಅಧ್ಯಕ್ಷ ರೋಹನ್ ಕುಮಾರ ಮತ್ತಿತರರಿದ್ದರು.




