ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಬಳಕೆ ಮಾಡಿ ಶಬ್ದ ಮಾಲಿನ್ಯ ನಿಯಮಾವಳಿ ಉಲ್ಲಂಘಿಸಿದ ಡಿಜೆ ಮಾಲೀಕರ ಹಾಗೂ ಆಪರೇಟರ್ಗಳ ವಿರುದ್ಧ 8 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ತಿಳಿಸಿದರು.
ಇಂದು ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶ್ರೀ ಗೌರಿ ಗಣೇಶ ವಿಸರ್ಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.
ಗಣೇಶ ವಿಸರ್ಜನೆ ವೇಳೆಯಲ್ಲಿ ಡಿಜೆ ಬಳಕೆಯಿಂದಾಗಿ ಮಕ್ಕಳು, ವೃದ್ಧರು, ಆಸ್ಪತ್ರೆಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಪರಿಣಾಮ ಉಂಟಾಗದಂತೆ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕರಿಸುವಂತೆ ವಿವಿಧ ಗಜಾನನ ಮಂಡಳಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ದೇಶನ ನೀಡಿದರು.
ಜನರು ಹೆಲ್ಮೆಟ್ ಧರಿಸಬೇಕು ತಮ್ಮ ಪ್ರಾಣಕ್ಕೆ ಬೆಲೆ ಕೊಡದೆ ಹೋದರೆ ಬೇರೆಯವರ ಪ್ರಾಣಕ್ಕೆ ಹೇಗೆ ಬೆಲೆ ಕೊಡಲು ಸಾಧ್ಯ. ಹೆಲ್ಮೆಟ್ ಹಾಕದೆ, ಗಾಡಿಯನ್ನು ವೇಗವಾಗಿ ಚಲಾಯಿಸಬಾರದು. ಇತ್ತೀಚೆಗೆ ಸಿಂಧೂರಿನಲ್ಲಿ ಅತ್ಯಂತ ಉತ್ತಮವಾಗಿ ಗಣೇಶ ವಿಸರ್ಜನೆ ಮಾಡಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ಕಡೆ ವಿಸರ್ಜನೆ ಮಾಡಬೇಕು. ಅಲ್ಲದೆ ಎಲ್ಲರೂ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಡಿಜೆ ಸೌಂಡ್ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ
ಇದೇ ಸಂದರ್ಭದಲ್ಲಿ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ್, ರಾಯಚೂರು ಡಿವೈಎಸ್ಪಿ ಶಾಂತಮೂರ್ತಿ, ರಾಯಚೂರು ತಹಶಿಲ್ದಾರ್ ಸುರೇಶ ವರ್ಮಾ, ಜೋನಲ್ ಆಯುಕ್ತ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಜಾನನ ಮಂಡಳಿಯ ಪದಾಧಿಕಾರಿಗಳು, ವಿವಿಧ ಸಂಘಟನೆಯ ಮುಖಂಡರು ಸಭೆಯಲ್ಲಿ ಇದ್ದರು.




