ದೇವದುರ್ಗ ತಾಲ್ಲೂಕು ಗಲಗ ಗ್ರಾಮದಲ್ಲಿ ಪದೇ ಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯವನ್ನು ಖಂಡಿಸಿ ಗ್ರಾಮಸ್ಥರು ಕೆಇಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಗ್ರಾಮಸ್ಥರು ಕೆಇಬಿ ಕಚೇರಿ ಎದುರು ಜಮಾಯಿಸಿ, ನಿರಂತರ ವಿದ್ಯುತ್ ವ್ಯತ್ಯಯದಿಂದ ರೈತರು, ಸಾರ್ವಜನಿಕರು, ವ್ಯಾಪಾರಸ್ಥರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲವು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದರು.
ಗಲಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ರೈತರು ಮುಂಗಾರು ಬೆಳೆ ಬೆಳೆದಿದ್ದು, ನೀರಾವರಿಗೆ ಅಗತ್ಯವಾದ ಸಮಯದಲ್ಲಿ ವಿದ್ಯುತ್ ಸರಬರಾಜು ದೊರೆಯದೆ ಬೆಳೆಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ದೂರಿದರು. ಪದೇ ಪದೇ ವಿದ್ಯುತ್ ಕಡಿತ ಮತ್ತು ಅನಿಯಮಿತ ವಿದ್ಯುತ್ ಪೂರೈಕೆಯಿಂದ ಕೃಷಿ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿದ್ದು, ಆರ್ಥಿಕ ನಷ್ಟ ಎದುರಿಸುವಂತಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಓದು, ವ್ಯಾಪಾರ ವಹಿವಾಟು ಹಾಗೂ ಗ್ರಾಮೀಣ ಜನಜೀವನಕ್ಕೂ ವಿದ್ಯುತ್ ಸಮಸ್ಯೆಯಿಂದ ತೊಂದರೆ ಉಂಟಾಗುತ್ತಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ
ಪ್ರತಿಭಟನೆಯಲ್ಲಿ ಶಿವನಗೌಡ ಪಾವರತಿ, ದೇವೇಂದ್ರಪ್ಪ ತಾತ, ಜೆಮಶರ್ ಅಲಿ, ಶೇಖರಪ್ಪ ನಾಯಕ, ಚನ್ನಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.




