ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸದ ವಿಚಾರವಾಗಿದೆ. ಅವರು ಸುದೀರ್ಘ ಕಾಲದಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಪದಗ್ರಹಣ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಹಾಗೂ ಐತಿಹಾಸಿಕ ಹಿನ್ನೆಲೆಯಿದ್ದು, ದೇಶದ ಸ್ವಾತಂತ್ರ್ಯ ಹೋರಾಟದಿಂದಲೂ ಪಕ್ಷ ಮಹತ್ವದ ಪಾತ್ರ ವಹಿಸಿದೆ. ಸ್ವಾತಂತ್ರ್ಯಾ ನಂತರವೂ ಹಲವು ದಶಕಗಳ ಕಾಲ ದೇಶದ ಆಡಳಿತದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದೆ. ಇಂತಹ ಹಿನ್ನೆಲೆ ಹೊಂದಿರುವ ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವುದು ಪ್ರತಿಯೊಬ್ಬ ಮುಖಂಡ ಹಾಗೂ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು. ಬೂತ್ ಮಟ್ಟದಿಂದ ಗ್ರಾಮ, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದವರೆಗೆ ಪಕ್ಷದ ಸಂಘಟನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೂತನ ಅಧ್ಯಕ್ಷ ಕೆ. ಶಾಂತಪ್ಪ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ. ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು.
ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಮಾತನಾಡಿ, ರಾಜಕೀಯದಲ್ಲಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಸೇವೆ ಸಲ್ಲಿಸುವವರು ಅವಕಾಶಗಳಿಗಾಗಿ ಕಾಯದೆ, ತಮ್ಮ ಸಾಮರ್ಥ್ಯ ಹಾಗೂ ಸಂಘಟನಾ ಶಕ್ತಿಯನ್ನು ಸಾಬೀತುಪಡಿಸುವ ಮೂಲಕ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಶಾಂತಪ್ಪ ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ದೊರೆತಿರುವುದು ಅವರ ಸಂಘಟನಾ ಶಕ್ತಿ ಹಾಗೂ ಪಕ್ಷಕ್ಕಾಗಿ ಸಲ್ಲಿಸಿರುವ ಸೇವೆಗೆ ದೊರೆತ ಗೌರವವಾಗಿದೆ. ಕಾಂಗ್ರೆಸ್ ಪಕ್ಷವು ಗಟ್ಟಿಯಾದ ತತ್ವ, ಸಿದ್ಧಾಂತ ಹಾಗೂ ಸರ್ವರಿಗೂ ಸಮಾನ ಅವಕಾಶದ ಆಶಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದ ವೈವಿಧ್ಯತೆ, ಬಹುತ್ವ ಮತ್ತು ಎಲ್ಲ ವರ್ಗಗಳ ಸಮಾನ ಹಕ್ಕುಗಳನ್ನು ಗೌರವಿಸುವ ಸಂವಿಧಾನದ ಆಶಯಗಳನ್ನು ಪಕ್ಷದ ನೀತಿ, ಸಿದ್ಧಾಂತಗಳಲ್ಲಿ ಅಳವಡಿಸಿಕೊಂಡಿದೆ ಎಂದು ಹೇಳಿದರು.
ಪಕ್ಷದ ಸಂಘಟನೆಯಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದರೂ, ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್ ಪಕ್ಷವು ಸಂದರ್ಭಾನುಸಾರ ಗುರುತಿಸಿ ಜವಾಬ್ದಾರಿಗಳನ್ನು ನೀಡಿದೆ. ಎಲ್ಲರಿಗೂ ಒಂದೇ ಸಂದರ್ಭದಲ್ಲಿ ಅವಕಾಶ ಸಿಗುವುದು ಸಾಧ್ಯವಿಲ್ಲ. ಹೀಗಾಗಿ ಕಾರ್ಯಕರ್ತರು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ
ಕಾರ್ಯಕ್ರಮದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ, ಶಾಸಕ ಹಂಪಯ್ಯ ನಾಯಕ, ಎಂಎಲ್ಸಿ ಬಸನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ಮಹಮದ್ ಶಾಲಂ, ಕೆ. ಅಸ್ಲಂ ಪಾಷಾ, ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಜಯಣ್ಣ, ಸಾಜೀದ್ ಸಮೀರ್, ಗಫೂರ್ಸಾಬ, ಶ್ರೀದೇವಿ ನಾಯಕ ಇನ್ನಿತರರು ಇದ್ದರು.




