ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಆಗ್ರಹಿಸಿ ಕಳೆದ 1500 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹಿನ್ನಲೆಯಲ್ಲಿ, ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿ ಸರ್ಕಲ್ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ಕೈಯಲ್ಲಿ ‘ರಾಯಚೂರಿಗೆ ಏಮ್ಸ್ ಬೇಕು’ ಕಲ್ಯಾಣ್ ಕರ್ನಾಟಕ ಭಾಗದ ಜನತೆಗೆ ಉನ್ನತ ವೈದ್ಯಕೀಯ ಸೌಲಭ್ಯ ಒದಗಿಸಿ’ ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ತಮ್ಮ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದರು.

ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರಕುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು. ಸುಮಾರು 4 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮೊಹರಂ ಅಲಾಯಿ ದೇವರ ಮಸೀದಿಯಲ್ಲಿ 5 ಬೆಳ್ಳಿ ಕೊಡೆ ಸೇರಿ ಹಲವು ವಸ್ತು ಕಳ್ಳತನ
ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾಮಾಜಿಕ ಹೋರಾಟಗಾರರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.




