ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಹತ್ತಾರು ಮಂದಿ ರಾತ್ರಿ ವೇಳೆ ಅಂಗಡಿ ಮುಂದೆ ಕುಳಿತು ಕಾಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಇ-ಕೆವೈಸಿ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಅಂತಿಮ ಗಡುವಿನ ಆತಂಕದಿಂದ ಜನರು ರಾತ್ರಿಯಲ್ಲಿಯೇ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ.
ರೈತ ಸಂಘದ ಮುಖಂಡ ಹಾಜಿ ಮಸ್ತಾನ್ ಮಾತನಾಡಿ, ಮಧ್ಯರಾತ್ರಿ ಸಮೀಪಿಸುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ತಾಂತ್ರಿಕ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಪರದಾಡುವಂತಾಗಿದೆ. ಸುತ್ತಮುತ್ತಲಿನ ಸಣ್ಣಪುಟ್ಟ ಗ್ರಾಮಗಳಿಂದ ಬರುವ ಜನರು ಇ-ಕೆವೈಸಿಗಾಗಿ ಎರಡು-ಮೂರು ದಿನಗಳ ಕಾಲ ಕೆಲಸ ಬಿಟ್ಟು ಸಮಯ ಮೀಸಲಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ
ಇ-ಕೆವೈಸಿ ಮಾಡಿಸಿಕೊಳ್ಳಲು ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಗೋಳು ಕಾಂಗ್ರೆಸ್ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರು, ಗರ್ಭಿಣಿಯರು ಹಾಗೂ ವೃದ್ಧರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ, ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಅವರು ಆಗ್ರಹಿಸಿದರು.




